ADVERTISEMENT

ನಾಡು– ನುಡಿ ರಕ್ಷಣೆಗೆ ಕೋಲಾರ ಜಿಲ್ಲೆ ಮಾದರಿ: ಕೆ.ಚಂದ್ರಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 15:41 IST
Last Updated 1 ನವೆಂಬರ್ 2020, 15:41 IST
ಕರ್ನಾಟಕ ರಕ್ಷಣಾ ವೇದಿಕೆಯು ಕೋಲಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸಿದ ಸಾಧಕರಿಗೆ ಗಂಗ ಅರಸು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯು ಕೋಲಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸಿದ ಸಾಧಕರಿಗೆ ಗಂಗ ಅರಸು ಪ್ರಶಸ್ತಿ ನೀಡಿ ಗೌರವಿಸಲಾಯಿತು.   

ಕೋಲಾರ: ‘ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆಯ ಜನರು ಕನ್ನಡ ನಾಡು ಹಾಗೂ ನುಡಿ ರಕ್ಷಣೆಯಲ್ಲಿ ಮುಂದಿದ್ದು, ಇದು ಮಾದರಿ ನಡೆಯಾಗಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯು (ನಾರಾಯಣಗೌಡ ಬಣ) ಇಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿ, ‘ಕರ್ನಾಟಕ ರಕ್ಷಣಾ ವೇದಿಕೆಯು ನಾಡು, ನುಡಿ, ನೆಲ, ಜಲ ರಕ್ಷಣೆಗೆ ಉತ್ತಮ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.

‘ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷನಾಗಿದ್ದಾಗ ಕನ್ನಡ ಬಾವುಟ ಬೀದಿಗೆ ತಂದು ಹೋರಾಟ ನಡೆಸಿ ಇಂಗ್ಲೀಷ್ ನಾಮಫಲಕಗಳಿಗೆ ಮಸಿ ಬಳಿದ ಕಾರಣ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ತೆಲುಗು ಮತ್ತು -ತಮಿಳು ಭಾಷೆಯ ಸಿನಿಮಾಗಳ ಪ್ರದರ್ಶನಕ್ಕೆ ಅಡ್ಡಿಪಡಿಸಿದಾಗಲೂ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದೆವು’ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.

ADVERTISEMENT

‘ಭಾಷೆಗೆ ಜಾತಿ, ಧರ್ಮವಿಲ್ಲ. ಎಲ್ಲರನ್ನೂ ಸೇರ್ಪಡೆ ಮಾಡಿಕೊಂಡು ಬದುಕುವ ಕನ್ನಡಿಗರ ಔದಾರ್ಯಕ್ಕೆ ಬೆಂಗಳೂರು ಸಾಕ್ಷಿಯಾಗಿದೆ. ಆಳುವ ಸರ್ಕಾರಗಳ ಕಿವಿ ಹಿಂಡುವ ಮೂಲಕ ಕನ್ನಡ ಭಾಷೆ ಬೆಳವಣಿಗೆಗೆ ನಾಂದಿ ಹಾಡಬೇಕು ಎಂದು ಸಲಹೆ ನೀಡಿದರು.

‘ಕನ್ನಡಕ್ಕೆ ರಾಜಾಶ್ರಯ ನೀಡಿದ್ದ ಗಂಗರಸರ ಹೆಸರಿನಲ್ಲಿ ಸಂಘಟನೆಯು ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಚಾರ. ಎಲ್ಲಾ ಭಾಷೆಗಳನ್ನು ಬಳಸಿಕೊಂಡು ಕನ್ನಡವನ್ನು ಶಕ್ತಿಯುತವಾಗಿ ಬೆಳೆಸಬೇಕು. ಮಾತೃ ಭಾಷೆ ಬಳಕೆಯ ಅರಿವನ್ನು ಮತ್ತಷ್ಟು ತೀವ್ರಗೊಳಿಸಬೇಕು’ ಎಂದು ಜಿಲ್ಲಾ ಪಿಯುಸಿ ಕನ್ನಡ ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ.ಜಿ.ನಾಗರಾಜ್ ಕಿವಿಮಾತು ಹೇಳಿದರು.

ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸಿದ ಮಾಯಾ ಬಾಲಚಂದ್ರ, ಭಾರತಿ, ಸರೋಜಮ್ಮ, ಡಿ.ಎಸ್.ಶ್ರೀನಿವಾಸಪ್ರಸಾದ್, ಹನುಮಪ್ಪ ಮತ್ತು ಕೆ.ಮಂಜುನಾಥ್ ಅವರಿಗೆ ಗಂಗ ಅರಸು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪ ವಿಭಾಗಾಧಿಕಾರಿ ಸೋಮಶೇಖರ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ರಾಘವೇಂದ್ರ, ವೈದ್ಯ ಡಾ.ರಮೇಶ್‌, ವೇಮಗಲ್ ಠಾಣೆ ಎಸ್‍ಐ ಕೇಶವಮೂರ್ತಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.