ADVERTISEMENT

ನ.21ಕ್ಕೆ ಪ್ರಮಾಣವಚನ ಸ್ವೀಕರಿಸುವುದಾಗಿ ಡಿಕೆಶಿ ಹೇಳಿದ್ದಾರೆಯೇ: ಬೈರತಿ ಸುರೇಶ್‌

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 12:35 IST
Last Updated 1 ನವೆಂಬರ್ 2025, 12:35 IST
   

ಕೋಲಾರ: ನ.21ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ಡಿ.ಕೆ.ಶಿವಕುಮಾರ್‌ ಏನಾದರೂ ಹೇಳಿದ್ದಾರೆಯೇ? ಮುಖ್ಯಮಂತ್ರಿ ಬದಲಾವಣೆಯ ವಿಚಾರವನ್ನು ಮಾಧ್ಯಮಗಳು ಸೃಷ್ಟಿಸಿರುವುದೇ ಹೊರತು ನಾವಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಸಿಡಿಮಿಡಿಗೊಂಡರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಯಾರು, ಯಾವಾಗ ಹೇಳಿದ್ದಾರೆ? ಜವಾಬ್ದಾರಿಯುತ ಸ್ಥಾನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆಯೇ? ಯಾರಾದರೂ ದಿನಾಂಕ ನಿಗದಿಪಡಿಸಿದ್ದಾರೆಯೇ? ಈ ಸಂಬಂಧ ಏನಾದರೂ ದಾಖಲೆ ಇದೆಯೇ’ ಎಂದು ಪ್ರಶ್ನಿಸಿದರು.

ನಾವೆಲ್ಲ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಹೈಕಮಾಂಡ್ ಹೇಳಿದಂತೆ ಕೇಳುವವರು. ಹೀಗಾಗಿ, ಮತ್ತೊಬ್ಬರ ಮಾತಿಗೆ ಕಿವಿಗೊಡುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್‌ ತೀರ್ಮಾನಿಸಲಿದೆ ಎಂದರು.

ADVERTISEMENT

ಆರ್‍ಎಸ್‍ಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಲುವಿನ ಕುರಿತು ಪ್ರತಿಕ್ರಿಯಿಸಿ, ‘ಮಲ್ಲಿಕಾರ್ಜುನ ಖರ್ಗೆ ಪಕ್ಷದ ಹಿರಿಯರು, ಎಐಸಿಸಿ ಅಧ್ಯಕ್ಷರು. ನಾವು ಅವರ ತೀರ್ಮಾನಕ್ಕೆ ಬದ್ಧ’ ಎಂದು ಹೇಳಿದರು.

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನ ಎಂಇಎಸ್‍ನವರು ಕರಾಳ ದಿನ ಆಚರಣೆ ಮಾಡುತ್ತಿರುವ ಕುರಿತು, ‘ಎಂಇಎಸ್‍ನವರಿಗೆ ಏನು ಯೋಗ್ಯತೆ ಇದೆ? ಅವರಿಗೂ ಕರ್ನಾಟಕಕ್ಕೆ ಏನು ಸಂಬಂಧ? ಅವರು ರಾಜ್ಯದಲ್ಲಿ ಇರುವುದನ್ನು ವಿರೋಧಿಸಿ ನಾವು ಕರಾಳ ದಿನ ಆಚರಣೆ ಮಾಡಬೇಕಾಗಿದೆ. ಇಲ್ಲಿನ ನೆಲ, ಜಲವನ್ನು ಉಪಯೋಗಿಸಿಕೊಂಡು ಕನ್ನಡಕ್ಕೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ಅದನ್ನು ಸಹಿಸಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ’ ಎಂದರು.

ಕನ್ನಡ ಶಾಲೆಗಳು ಮುಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಕಾಲ ಬದಲಾಗುತ್ತಿದ್ದಂತೆ ಪೋಷಕರು ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ಓದಿಸಲು ಮುಂದಾಗಿದ್ದಾರೆ. ಯಾವುದೇ ಶಾಲೆಯನ್ನು ಮುಚ್ಚಬೇಕು ಎಂಬುದು ಸರ್ಕಾರದ ಉದ್ದೇಶವಿಲ್ಲ. ಕನ್ನಡ ಶಾಲೆಯಲ್ಲಿ ಓದಿದವರು ಸಹ ಐಎಎಸ್, ಎಂಜಿನಿಯರ್, ವೈದ್ಯರು, ವಿಜ್ಞಾನಿಗಳು ಆಗಿದ್ದಾರೆ. ಕನ್ನಡ ಶಾಲೆಗಳಿಗೆ ಅಗತ್ಯವಾಗಿ ಬೇಕಾಗಿರುವ ಅನುದಾನ, ಗುಣಮಟ್ಟದ ಶಿಕ್ಷಣ ಕೊಡಲು ಸರ್ಕಾರ ಸಿದ್ಧವಿದೆ. ಈ ನಿಟ್ಟಿನಲ್ಲಿ ನಾನು ಕೂಡ ಪ್ರಯತ್ನ ಹಾಕುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.