ಶ್ರೀನಿವಾಸಪುರ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರಶ್ನಿಸದೆ ಏನನ್ನೂ ಒಪ್ಪಿಕೊಳ್ಳಬಾರದು ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಹೇಳಿದರು.
ಸುಗಟೂರಿನ ಸಬರಮತಿ ಪ್ರೌಢ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳು. ಇವೆರಡನ್ನೂ ಮಾನವ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಖ್ಯಾತ ವಿಜ್ಞಾನಿಗಳ ಜೀವನ ಹಾಗೂ ಸಾಧನೆ ಕುರಿತು ತಿಳಿಯಬೇಕು. ಅವರ ಆದರ್ಶ ಮೈಗೂಡಿಸಿಕೊಂಡು, ಸಂಶೋಧನೆಯಲ್ಲಿ ತೊಡಗಬೇಕು. ಶಂಶೋಧನೆ ಸವಿ ಸಮಾಜದ ಎಲ್ಲ ವರ್ಗದ ಜನರಿಗೂ ಸಿಗುವಂತಾಗಬೇಕು ಎಂದರು.
ವಿಜ್ಞಾನ ವಿಷಯ ಪರಿವೀಕ್ಷಕ ಶಂಕರೇಗೌಡ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ಸಮಾಜದಲ್ಲಿನ ಮೂಢನಂಬಿಕೆಗಳ ಬಗ್ಗೆ ಅರಿವು ಮೂಡಿಸಬೇಕು. ನಂಬಿಕೆ ಹಾಗೂ ಮೂಢನಂಬಿಕೆಗೆ ಇರುವ ವ್ಯತ್ಯಾಸಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಪ್ರತಿ ಕೆಲಸದಲ್ಲೂ ವೈಜ್ಞಾನಿ ದೃಷ್ಟಿಕೋನ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಶಿಕ್ಷಕ ಸಮುದಾಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಹಾಗೂ ವೈಜ್ಞಾನಿಕ ಸಂಶೋಧನೆಯಲ್ಲಿ ತೊಡಗಲು ಪ್ರೇರಣೆ ನೀಡಬೇಕು. ಮಕ್ಕಳಿಗೆ ವೈಜ್ಞಾನಿಕ ಕತೆಗಳನ್ನು ಹೇಳುವ ಮೂಲಕ ಗಮನ ಸೆಳೆಯಬೇಕು ಎಂದು ಹೇಳಿದರು. ಶಾಲಾ ಆಡಳಿತಾಧಿಕಾರಿ ಬಿ. ವೆಂಕಟೇಶ್, ಮುಖ್ಯ ಶಿಕ್ಷಕ ಪಿ.ಆರ್. ದೊಡ್ಡಾರೆಡ್ಡಿ, ರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.