ADVERTISEMENT

ಅಂಗವಿಕಲರ ಬಗ್ಗೆ ಕೀಳರಿಮೆ ಬೇಡ: ಸಂಸದ ಮುನಿಸ್ವಾಮಿ ಕಿವಿಮಾತು

ಸಾಮಾಜಿಕ ಅಧಿಕಾರಿತಾ ಶಿಬಿರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 15:16 IST
Last Updated 2 ಜುಲೈ 2021, 15:16 IST
ಕೋಲಾರದಲ್ಲಿ ಶುಕ್ರವಾರ ನಡೆದ ಸಾಮಾಜಿಕ ಅಧಿಕಾರಿತಾ ಶಿಬಿರದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಅಂಗವಿಕಲರಿಗೆ ಸಲಕರಣೆ ವಿತರಿಸಿದರು
ಕೋಲಾರದಲ್ಲಿ ಶುಕ್ರವಾರ ನಡೆದ ಸಾಮಾಜಿಕ ಅಧಿಕಾರಿತಾ ಶಿಬಿರದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಅಂಗವಿಕಲರಿಗೆ ಸಲಕರಣೆ ವಿತರಿಸಿದರು   

ಕೋಲಾರ: ‘ಅಂಗವೈಕಲ್ಯ ಶಾಪವಲ್ಲ. ಅಂಗವಿಕಲರ ಬಗ್ಗೆ ಕೀಳರಿಮೆ ಬೇಡ. ಕಾರಣಾಂತರದಿಂದ ಅಂಗವಿಕಲರಾಗಿ ಹುಟ್ಟುವವರಿಗೆ ಮೋಸ ಮಾಡಬಾರದು’ ಎಂದು ಸಂಸದ ಎಸ್‌.ಮುನಿಸ್ವಾಮಿ ಕಿವಿಮಾತು ಹೇಳಿದರು.

ಇಲ್ಲಿ ಶುಕ್ರವಾರ ನಡೆದ ಸಾಮಾಜಿಕ ಅಧಿಕಾರಿತಾ ಶಿಬಿರದಲ್ಲಿ ಮಾತನಾಡಿ, ‘ಅಂಗವಿಕಲರಿಗೆ ಸಮಾಜದ ಅನುಕಂಪ ಬೇಕಿಲ್ಲ. ಅವರ ಕೌಶಲಕ್ಕೆ ತಕ್ಕಂತೆ ವ್ಯವಸ್ಥೆ ಮಾಡಬೇಕು. ಅಂಗವೈಕಲ್ಯವು ಭವಿಷ್ಯದ ಸಾಧನೆಗೆ ಅಡ್ಡಿಯಲ್ಲ’ ಎಂದು ಅಭಿಪ್ರಾಯಪಟ್ಟರು.

‘ಅಂಗವಿಕಲರಿಗೆ ಅವಕಾಶ ನೀಡಿದರೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರತಿಭೆ ಪ್ರದರ್ಶಿಸಬಲ್ಲರು. ಅಂಗವಿಕಲರು ಅಂಗವೈಕಲ್ಯ ಹೊಂದಿದ್ದರೂ ಬುದ್ಧಿಶಕ್ತಿಯಲ್ಲಿ ಮೇಧಾವಿಗಳಾಗಿರುತ್ತಾರೆ. ಅಂಗವಿಕಲರಲ್ಲೂ ಸಾಧನೆಯ ಛಲವಿದೆ ಎಂಬುದನ್ನು ಹಲವರು ತೋರಿಸಿಕೊಟ್ಟಿದ್ದಾರೆ. ಅಂಗವಿಕಲರು ಸಾಮಾನ್ಯ ವ್ಯಕ್ತಿಗಿಂತ ಪ್ರತಿಭಾವಂತರಾಗಿರುತ್ತಾರೆ. ಅಂಗವಿಕಲರು ಸರ್ಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಒಗಳು, ಅಂಗವಿಕಲರ ಕಲ್ಯಾಣಾಧಿಕಾರಿಗಳು ತಮ್ಮ ಸುತ್ತಮುತ್ತಲಿನ ಅಂಗವಿಕಲರನ್ನು ಗುರುತಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಬೇಕು. ಅಂಗವಿಕಲರಿಗೆ ಸರ್ಕಾರ ಅವರ ಜೊತೆಗಿದೆ ಎಂದು ಮಾನಸಿಕ ಧೈರ್ಯ ತುಂಬಬೇಕು. ಎಲ್ಲಾ ಅಂಗವಿಕಲರಿಗೆ ಅಗತ್ಯತೆಗಳನ್ನು ಪೂರೈಸುತ್ತೇವೆ’ ಎಂದು ಭರವಸೆ ನೀಡಿದರು.

‘ಓಡಾಡಲು ಸಾಧ್ಯವಾಗದ ಅಂಗವಿಕಲರಿಗೆ ಅಂಗಡಿಗಳನ್ನು ಹಾಕಿಸಿ ಸ್ವಯಂ ವ್ಯಾಪಾರ ಮಾಡಲು ಉತ್ತೇಜಿಸಬೇಕು. ಆಗ ಜಿಲ್ಲೆ ಇಡೀ ರಾಜ್ಯದಲ್ಲಿ ಮಾದರಿಯಾಗುತ್ತದೆ. ಅಂಗವಿಕಲರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆ ಹಂಚಿಕೊಂಡರೆ ಖಂಡಿತ ಪರಿಹರಿಸುತ್ತೇವೆ’ ಎಂದು ಹೇಳಿದರು.

ಮುಖ್ಯವಾಹಿನಿಗೆ ಬನ್ನಿ: ‘ಅಂಗವಿಕಲರು ತಮಗೆ ಅಂಗವಿಕಲತೆ ಇದೆ ಎಂಬ ಕೊರಗಿನಿಂದ ಹೊರ ಬಂದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ಮಾನಸಿಕವಾಗಿ ಸದೃಢರಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅನ್ಯಾಯ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

‘ಎಲ್ಲಾ ಅಂಗವಿಕಲರಿಗೆ ಯಾವುದೇ ಭೇದ ಭಾವವಿಲ್ಲದೆ ಸಮಾನ ಅವಕಾಶ ಮತ್ತು ಸೌಕರ್ಯ ಒದಗಿಸಬೇಕು. ಅಂಗವಿಕಲರಲ್ಲಿ ಕೀಳರಿಮೆ ಬಾರದಂತೆ ಮುನ್ನಡೆಸಬೇಕು. ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿ ಮನಸ್ಸಿಗೆ ನೋವುಂಟು ಮಾಡಬಾರದು. ಸರ್ಕಾರ ಅಂಗವಿಕಲರಿಗೆ ಹೆಚ್ಚಿನ ಸೌಲಭ್ಯ ನೀಡುತ್ತಿದೆ. ಉಚಿತ ಶಿಕ್ಷಣದ ಜತೆಗೆ ಅಗತ್ಯ ಸಲಕರಣೆ ಒದಗಿಸುತ್ತಿದೆ. ಸರ್ಕಾರದ ಸೌಲಭ್ಯಗಳ ಬಗ್ಗೆ ಅವರಿಗೆ ಮಾಹಿತಿ ನೀಡಬೇಕು’ ಎಂದರು.

ಸಮಾನ ಅವಕಾಶ: ‘ಅಂಗವಿಕಲರಿಗೆ ವಿವಿಧ ಸಮಸ್ಯೆಗಳಿವೆ. ಅಧಿಕಾರಿಗಳು ಆ ಸಮಸ್ಯೆಗಳನ್ನು ಪರಿಹರಿಸಬೇಕು. ಅಂಗವಿಲಕರಿಗೂ ಸಮಾನ ಅವಕಾಶವಿದೆ. ಸರ್ಕಾರದ ಸವಲತ್ತುಗಳನ್ನು ಅಂಗವಿಕಲರಿಗೆ ತಲುಪಿಸುವುದು ಎಲ್ಲರ ಜವಾಬ್ದಾರಿ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.

ಅಂಗವಿಕಲರಿಗೆ ಸಾಧನ ಸಲಕರಣೆ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಂ.ಜಿ.ಪಾಲಿ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣಾಧಿಕಾರಿ ಎಂ.ಮುನಿರಾಜಪ್ಪ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.