ADVERTISEMENT

ಮದ್ಯ ದಾಸ್ತಾನು ಪರಿಶೀಲನೆ, ವ್ಯತ್ಯಾಸ ಕಂಡುಬಂದರೆ ಕ್ರಿಮಿನಲ್‌ ಪ್ರಕರಣ: ನಾಗೇಶ್‌

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 11:18 IST
Last Updated 21 ಏಪ್ರಿಲ್ 2020, 11:18 IST
ಎಚ್‌.ನಾಗೇಶ್‌
ಎಚ್‌.ನಾಗೇಶ್‌   

ಕೋಲಾರ: ‘ರಾಜ್ಯದೆಲ್ಲೆಡೆ ಮದ್ಯದಂಗಡಿಗಳಲ್ಲಿ ಮದ್ಯದ ದಾಸ್ತಾನಿನ ಪರಿಶೀಲನೆ ಮಾಡಿ ವ್ಯತ್ಯಾಸ ಕಂಡುಬಂದರೆ ಮಾಲೀಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಪರವಾನಗಿ (ಲೈಸನ್ಸ್‌) ರದ್ದುಪಡಿಸುತ್ತೇವೆ’ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮದ್ಯದಂಗಡಿ ಮಾಲೀಕರೇ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ಅಕ್ರಮಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ಹೇಳಿದರು.

‘ಲಾಕ್‌ಡೌನ್‌ ಜಾರಿಗೂ ಮುನ್ನ ಮದ್ಯದಂಗಡಿಗಳಲ್ಲಿದ್ದ ಮದ್ಯದ ದಾಸ್ತಾನಿನ ವಿವರವನ್ನು ದಾಖಲೆ ಪುಸ್ತಕದಲ್ಲಿ ನಮೂದು ಮಾಡಿ ಅಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿತ್ತು. ದಾಖಲೆ ಪುಸ್ತಕದಲ್ಲಿನ ವಿವರ ಮತ್ತು ಸದ್ಯ ದಾಸ್ತಾನಿರುವ ಮದ್ಯದ ಪ್ರಮಾಣವನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮದ್ಯದ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡುಬಂದರೆ ಮುಲಾಜಿಲ್ಲದೆ ಅಂಗಡಿಯ ಲೈಸನ್ಸ್‌ ರದ್ದು ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ನನಗೆ ಮದ್ಯ ವ್ಯಸನಿಗಳ ಕಾಟ ಹೆಚ್ಚಿದೆ. ಕುಡುಕರ ಸಂಘದ ಅಧ್ಯಕ್ಷರೇ ಕರೆ ಮಾಡಿ ಮದ್ಯದ ವಹಿವಾಟು ಆರಂಭಿಸುವಂತೆ ಒತ್ತಾಯಿಸಿದ್ದಾರೆ. ಲಾಕ್‌ಡೌನ್‌ ಕಾರಣಕ್ಕೆ ತಾತ್ಕಾಲಿಕವಾಗಿ ಮದ್ಯದ ವಹಿವಾಟು ನಿರ್ಬಂಧಿಸಿರುವುದಾಗಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಮೇ 3ರ ನಂತರವಷ್ಟೇ ಮದ್ಯ ಮಾರಾಟಕ್ಕೆ ಅನುಮತಿ ನೀಡುತ್ತೇವೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.