ADVERTISEMENT

ಆಡಳಿತ ವೈಫಲ್ಯ; ಜೆಡಿಎಸ್‌ನಿಂದ‌ ಕಾಂಗ್ರೆಸ್‌ ಸೇರಿದ 50ಕ್ಕೂ ಹೆಚ್ಚು ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 8:43 IST
Last Updated 31 ಆಗಸ್ಟ್ 2020, 8:43 IST
ಮಾಲೂರು ತಾಲ್ಲೂಕಿನ ಕೆಸರಗೆರೆ ಗ್ರಾಮದಲ್ಲಿ ಭಾನುವಾರ ಮಾಸ್ತಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು
ಮಾಲೂರು ತಾಲ್ಲೂಕಿನ ಕೆಸರಗೆರೆ ಗ್ರಾಮದಲ್ಲಿ ಭಾನುವಾರ ಮಾಸ್ತಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು   

ಮಾಲೂರು: ಜನಸಾಮಾನ್ಯರು ಬಿಜೆಪಿಗೆ ನೀಡಿದ್ದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿಲ್ಲ. ಈ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನ ಬೇಸತ್ತಿದ್ದಾರೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ತಾಲ್ಲೂಕಿನ ಮಾಸ್ತಿ ಹೋಬಳಿ ವ್ಯಾಪ್ತಿಯ ಕೆಸರಗೆರೆ ಗ್ರಾಮದಲ್ಲಿ ಭಾನುವಾರ ಮಾಸ್ತಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿವೆ. ಹಿಂದಿನ ಕಾಂಗ್ರೆಸ್– ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸುಮಾರು ₹220 ಕೋಟಿ ವಿಶೇಷ ಅನುದಾನವನ್ನು ಮಂಜೂರು ಮಾಡಿಸಿದ್ದೆ. ಆದ್ದರಿಂದ ಮಾಸ್ತಿ ಹೋಬಳಿ ಸೇರಿದಂತೆ ತಾಲ್ಲೂಕಿನ ಪ್ರಮುಖ ರಸ್ತೆಗಳು ಅಭಿವೃದ್ಧಿಕಾಣಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ADVERTISEMENT

ಕೊರೊನಾ ಸಂಕಷ್ಟದ ಸಮಯದಲ್ಲಿ ಜನಸಾಮಾನ್ಯರಿಗೆ ಸಮರ್ಪಕವಾಗಿ ಆರೋಗ್ಯ ಸೇವೆ ನೀಡಲು ವಿಫಲವಾಗಿರುವ ಸರ್ಕಾರಗಳು ಜನರ ವಿರೋಧಕ್ಕೆ ತುತ್ತಾಗಿವೆ. ಪ್ರತಿಹಂತದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಕೊರೊನಾ ಹೆಸರಿನಲ್ಲಿಯೂ ಹಗರಣಗಳನ್ನು ನಡೆಸುವ ಸ್ಥಿತಿಗೆ ಸರ್ಕಾರ ಬಂದು ನಿಂತಿದೆ ಎಂದು ಕಿಡಿ ಕಾರಿದರು.

ಈ ಹಿಂದೆ ಯುಪಿಎ ಸರ್ಕಾರ ಹಾಗೂ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನರೇಗಾ, ಅನ್ನಭಾಗ್ಯ, ರೈತಭಾಗ್ಯದಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿತು. ಎಲ್ಲ ಜಾತಿ, ಸಮುದಾಯಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಆಡಳಿತ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ರಾಜ್ಯದಲ್ಲಿ ಮುಂದೆ ನಡೆಯುವ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮತ್ತೆ ಪಕ್ಷ ಸಂಪೂರ್ಣ ಬಹುಮತದಿಂದ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಮಾಸ್ತಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಖತ್ ಉಲ್ಲಾ ಬೇಗ್ ನೇತೃತ್ವದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮುಖಂಡರಾದ ಅಮರನಾರಾಯಣ್, ಉಬೇದ್ ಉಲ್ಲಾ ಬೇಗ್, ಪರಿಮಾಳ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಜನರನ್ನು ಶಾಸಕರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ಮುಖಂಡರಾದ ಕೆ.ಎಚ್.ಸೋಮಶೇಖರ್, ಎಚ್.ಹನುಮಂತಪ್ಪ, ಸಬ್ದಾರ್ ಬೇಗ್, ಎಚ್.ಎಂ.ವಿಜಯ ನರಸಿಂಹ, ಎ.ಅಶ್ವತ್ಥರೆಡ್ಡಿ, ಬಿ.ಆರ್.ಶ್ರೀನಿವಾಸ್, ಟೆಂಟ್ ವೆಂಕಟೇಶ್, ಕೃಷ್ಣಕುಮಾರ್, ಜೆಸಿಬಿ ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.