ADVERTISEMENT

ನಕಲಿ ಕ್ಲಿನಿಕ್‌ ಹಾವಳಿ: ಕಡಿವಾಣ ಹಾಕಿ

ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ರೈತ ಸಂಘ ಸದಸ್ಯರ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 13:15 IST
Last Updated 3 ನವೆಂಬರ್ 2020, 13:15 IST
ನಕಲಿ ಕ್ಲಿನಿಕ್‌ಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಜಿಲ್ಲಾ ಕ್ಷಯಾ ರೋಗ ನಿಯಂತ್ರಣಾಧಿಕಾರಿ ಡಾ.ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.
ನಕಲಿ ಕ್ಲಿನಿಕ್‌ಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಜಿಲ್ಲಾ ಕ್ಷಯಾ ರೋಗ ನಿಯಂತ್ರಣಾಧಿಕಾರಿ ಡಾ.ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.   

ಕೋಲಾರ: ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‌ಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಮಂಗಳವಾರ ಜಿಲ್ಲಾ ಕ್ಷಯಾ ರೋಗ ನಿಯಂತ್ರಣಾಧಿಕಾರಿ ಡಾ.ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.

‘ಜಿಲ್ಲೆಯಲ್ಲಿ ನಕಲಿ ವೈದ್ಯರು ಹಾಗೂ ಕ್ಲಿನಿಕ್‌ಗಳ ಹಾವಳಿ ಮಿತಿ ಮೀರಿದೆ. ನಕಲಿ ಕ್ಲಿನಿಕ್‌ಗಳು ನಾಯಿ ಕೊಡೆಗಳಂತೆ ಹಾದಿ ಬೀದಿಯಲ್ಲಿ ತಲೆ ಎತ್ತಿವೆ. ನಕಲಿ ವೈದ್ಯರು ಹಣದಾಸೆಗೆ ಜನರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

‘ನಕಲಿ ವೈದ್ಯರು ಚಿಕಿತ್ಸೆ ಸೋಗಿನಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿದ್ದಾರೆ. ಜಿಲ್ಲೆಯ ಗಡಿ ಭಾಗದಲ್ಲಿ ಇವರ ಹಾವಳಿ ಹೆಚ್ಚಿದೆ. ಈ ದಂಧೆಗೆ ಕಡಿವಾಣ ಹಾಕುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.

ADVERTISEMENT

‘ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗುತ್ತಿಲ್ಲ. ಹೀಗಾಗಿ ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ವೈದ್ಯರು ಪರಿಸ್ಥಿತಿಯ ಲಾಭ ಪಡೆದು ದುಪ್ಪಟ್ಟು ಹಣ ಪಡೆಯುತ್ತಿವೆ. ಈ ಸಂಗತಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಮೌನಕ್ಕೆ ಶರಣಾಗಿದ್ದಾರೆ’ ಎಂದು ಕಿಡಿಕಾರಿದರು.

336 ನಕಲಿ ಕ್ಲಿನಿಕ್‌: ‘ಜಿಲ್ಲೆಯಲ್ಲಿ ಸುಮಾರು 336 ನಕಲಿ ಕ್ಲಿನಿಕ್‌ಗಳಿವೆ. ಗ್ರಾಮೀಣ ಭಾಗದ ಜನರು ವಿಧಿಯಿಲ್ಲದೆ ಚಿಕಿತ್ಸೆಗಾಗಿ ಈ ನಕಲಿ ಕ್ಲಿನಿಕ್‌ಗಳಿಗೆ ಹೋಗುತ್ತಿದ್ದಾರೆ. ರಮೇಶ್‌ಕುಮಾರ್‌ ಅವರು ಆರೋಗ್ಯ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‌ಗಳನ್ನು ಬಂದ್‌ ಮಾಡಿಸಿದ್ದರು. ಆದರೆ, ಈಗ ತಾಲ್ಲೂಕು ವೈದ್ಯಾಧಿಕಾರಿಗಳು ಲಂಚದಾಸೆಗೆ ನಕಲಿ ಕ್ಲಿನಿಕ್‌ಗಳ ವಿರುದ್ಧ ಕ್ರಮ ಜರುಗಿಸುತ್ತಿಲ್ಲ’ ಎಂದು ಸಂಘಟನೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಎ.ನಳಿನಿಗೌಡ ದೂರಿದರು.

‘ಕೊರೊನಾ ಸೋಂಕಿನಿಂದ ಇಡೀ ದೇಶ ತಲ್ಲಣಗೊಂಡಿದೆ. ಆದರೆ, ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಹೆಚ್ಚು ಹಣ ಪಡೆಯುತ್ತಿವೆ. ಮತ್ತೊಂದೆಡೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿವೆ. ಆರೋಗ್ಯ ಇಲಾಖೆಗೆ ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಇಲ್ಲವಾಗಿದೆ’ ಎಂದು ಹೇಳಿದರು.

ಪ್ರಕರಣ ದಾಖಲಿಸಿ: ‘ನಕಲಿ ಕ್ಲಿನಿಕ್‌ಗಳನ್ನು ಬಂದ್‌ ಮಾಡಿಸಬೇಕು. ನಕಲಿ ವೈದ್ಯರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಸಾಂಕ್ರಾಮಿಕ ರೋಗಗಳ ಚಿಕಿತ್ಸೆಗಾಗಿ ಗ್ರಾಮ ಪಂಚಾಯಿತಿಗೊಂದು ಫೀವರ್ ಕ್ಲಿನಿಕ್‌ ತೆರೆಯಬೇಕು. ಸಂಚಾರ ಆರೋಗ್ಯ ವಾಹನ ಸೇವೆ ಆರಂಭಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಹೊರಗಡೆ ಔಷಧ ಮತ್ತು ಮಾತ್ರೆ ಖರೀದಿಸುವಂತೆ ಚೀಟಿ ಬರೆದುಕೊಡುವ ಪದ್ಧತಿ ತಪ್ಪಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

ಸಂಘಟನೆಯ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಸದಸ್ಯರಾದ ಶಿವು, ಚಾನ್‌ಪಾಷಾ, ಜಮೀರ್ ಅಹಮ್ಮದ್‌, ಕಿರಣ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.