ಕೋಲಾರ: ಜಿಲ್ಲೆಯಲ್ಲಿ ಬುಧವಾರ ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದ್ದರಿಂದ ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಜನ ಜೀವನಕ್ಕೆ ತೊಂದರೆಯಾಯಿತು.
ಸತತ ಬರದಿಂದ ನಲುಗಿದ್ದ ರೈತಾಪಿ ವರ್ಗಕ್ಕೆ ವರುಣದೇವ ಖುಷಿ ಕೊಟ್ಟಿದ್ದರೆ ನಗರವಾಸಿಗಳಿಗೆ ಕಣ್ಣೀರು ತರಿಸಿದ. ಜಿಲ್ಲೆಯಲ್ಲಿ ಬೆಳಿಗ್ಗೆ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ ಸುರಿದ ಮಳೆಯು ಜಿಲ್ಲೆಗೆ ತಂಪೆರೆಯಿತು.
ಮಳೆಯಿಂದಾಗಿ ಚರಂಡಿಗಳು ಕ್ಷಣಮಾತ್ರದಲ್ಲಿ ಜಲಾವೃತವಾಗಿ ಕೊಳಚೆ ನೀರು ರಸ್ತೆಗೆ ಹರಿದು ಅವಾಂತರ ಸೃಷ್ಟಿಸಿತು. ಮ್ಯಾನ್ಹೋಲ್ಗಳು ಭರ್ತಿಯಾಗಿ ಮಲಮೂತ್ರ ಹಾಗೂ ಕೊಳಚೆ ನೀರು ರಸ್ತೆ ಮೇಲೆ ಹರಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
ಕೆಲವೆಡೆ ಗಾಳಿಯ ತೀವ್ರತೆಗೆ ಮರ ಹಾಗೂ ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ರೈಲ್ವೆ ಅಂಡರ್ಪಾಸ್ಗಳಲ್ಲಿ ನೀರು ನಿಂತು ಜನರ ಓಡಾಟಕ್ಕೆ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಸ್ಥಳೀಯರು ರಸ್ತೆಗೆ ಉರುಳಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸುತ್ತಿದ್ದ ದೃಶ್ಯ ಕಂಡುಬಂದಿತು. ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯದಲ್ಲಿ ತೊಡಗಿದ್ದರು.
ರಾತ್ರಿ ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯಾಯಿತು. ವಾಹನ ಸವಾರರು ಹಾಗೂ ಸಾರ್ವಜನಿಕರು ಮಳೆಯಿಂದ ರಕ್ಷಣೆ ಪಡೆಯಲು ಪೆಟ್ರೋಲ್ ಬಂಕ್, ಅಂಗಡಿ ಹಾಗೂ ಮರಗಳ ಕೆಳಗೆ ನಿಂತಿದ್ದ ದೃಶ್ಯ ಕಂಡುಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.