ADVERTISEMENT

ಪರಿಶಿಷ್ಟ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ; ಯುವಕ ಆತ್ಮಹತ್ಯೆ

ಮರ್ಯಾದೆಗೇಡು ಹತ್ಯೆ | ಯುವಕ ಆತ್ಮಹತ್ಯೆ; ಯುವತಿಯ ತಂದೆ ಬಂಧನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2023, 15:45 IST
Last Updated 27 ಜೂನ್ 2023, 15:45 IST
   

ಬಂಗಾರಪೇಟೆ (ಕೋಲಾರ ಜಿಲ್ಲೆ): ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯು ಪುತ್ರಿಯನ್ನು ಕೊಂದಿರುವ ಮರ್ಯಾದೆಗೇಡು ಹತ್ಯೆ ಪ್ರಕರಣ ತಾಲ್ಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪ್ರಿಯತಮೆಯ ಸಾವಿನ ಸುದ್ದಿ ತಿಳಿದು ಆಘಾತಕ್ಕೆ ಒಳಗಾದ ಯುವಕನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗೊಲ್ಲ ಸಮುದಾಯಕ್ಕೆ ಸೇರಿದ ಗ್ರಾಮದ ಕೃಷ್ಣಮೂರ್ತಿ ಅವರ ಪುತ್ರಿ ಕೀರ್ತಿ (20) ಹತ್ಯೆಗೊಳಗಾದ ಯುವತಿ. ಅದೇ ಗ್ರಾಮದ ಗಂಗಾಧರ್‌ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಕೃಷ್ಣಮೂರ್ತಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಕೆಜಿಎಫ್‌ ಪೊಲೀಸ್‌ ವರಿಷ್ಠಾಧಿಕಾರಿ ಧರಣಿದೇವಿ ಮಾಲಗತ್ತಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಕೀರ್ತಿ ಕೆಜಿಎಫ್‌ ಕಾಲೇಜಿನಲ್ಲಿ ದ್ವಿತೀಯ ಪದವಿ ಓದುತ್ತಿದ್ದಳು. ಆಕೆಯ ಮನೆ ಮುಂದೆಯೇ ಯುವಕ ಗಂಗಾಧರನ ನಿವಾಸವಿದೆ. ಇವರಿಬ್ಬರ ನಡುವೆ ಪ್ರೀತಿ ಬೆಳೆದಿದ್ದು ಮದುವೆಯಾಗಲು ತೀರ್ಮಾನಿಸಿದ್ದಾರೆ. ಈ ವಿಚಾರ ಯುವತಿಯ ಕುಟುಂಬಕ್ಕೆ ಗೊತ್ತಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಆ ಯುವಕನನ್ನೇ ವಿವಾಹವಾಗುವುದಾಗಿ ಕೀರ್ತಿ ಹಟ ಹಿಡಿದಿದ್ದಾಳೆ. ಈ ಸಂಬಂಧ ಯುವತಿಯ ಮನೆಯಲ್ಲಿ ಸೋಮವಾರ ರಾತ್ರಿ ಜಗಳ ನಡೆದಿದೆ. ಮಂಗಳವಾರ ಬೆಳಿಗ್ಗೆ ಪುತ್ರಿಯನ್ನು ಕೃಷ್ಣಮೂರ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಇದು ಗೊತ್ತಾಗಿ ಯುವಕ ಗಂಗಾಧರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದರು.

ಮೈಸೂರಿನಿಂದ ಚೆನ್ನೈಗೆ ತೆರಳುವ ಎಕ್ಸ್‌ಪ್ರೆಸ್‌ ರೈಲಿಗೆ ಮಂಗಳವಾರ ಬೆಳಿಗ್ಗೆ 7.30ರ ಸುಮಾರಿಗೆ ಯುವಕ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ದ್ವಿತೀಯ ಪಿಯುಸಿ ಅನುತ್ತೀರ್ಣನಾಗಿದ್ದ ಯುವಕ, ಗಾರೆ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.