ಕೋಲಾರ: ‘ಶೈಕ್ಷಣಿಕ ಚಟುವಟಿಕೆಗೆ ಸೀಮಿತರಾಗಿದ್ದ ಶಿಕ್ಷಕರು ಬಡ್ತಿ ಹೊಂದಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾಗಿರುವುದರಿಂದ ಇದೀಗ ಶಾಲೆಯ ಸಮಗ್ರ ಅಭಿವೃದ್ಧಿಯ ಹೊಣೆ ಹೆಗಲೇರಿದೆ. ಹೀಗಾಗಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು’ ಎಂದು ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಸಲಹೆ ನೀಡಿದರು.
ಜಿಲ್ಲಾ ಹಿಂದಿ ಶಿಕ್ಷಕರ ಸಂಘವು ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಿದ 12 ಶಿಕ್ಷಕರಿಗೆ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ‘ಇಷ್ಟು ದಿನ ಹೆಚ್ಚಾಗಿ ಶೈಕ್ಷಣಿಕ ಕಾರ್ಯದಲ್ಲಿ ಮಾತ್ರ ತೊಡಗಿಸಿಕೊಳ್ಳುತ್ತಿದ್ದೀರಿ. ಇದೀಗ ಆಡಳಿತದ ಹೊಣೆಯೂ ಬಂದಿದೆ. ಕಾರ್ಯ ನಿರ್ವಹಣೆ ವೇಳೆ ಇಲಾಖೆ ನಿಯಮಗಳ ಪಾಲನೆಗೆ ಒತ್ತು ಕೊಡಿ’ ಎಂದು ಕಿವಿಮಾತು ಹೇಳಿದರು.
‘ಶಾಲೆಗಳಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯ ಶಿಕ್ಷಕರು ಎಲ್ಲಾ ಸಹ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಯೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡು ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು. ಬದ್ಧತೆಯಿಂದ ಕೆಲಸ ಮಾಡಬೇಕು. ಸಿಕ್ಕಿರುವ ಬಡ್ತಿ ಅವಕಾಶ ಸದ್ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸಿ’ ಎಂದು ಆಶಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.