ಕೋಲಾರ: ‘ಭ್ರೂಣ ಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿ ಬೀಗಮುದ್ರೆ ಹಾಕಿ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಇಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಹಾಗೂ ಡೆಂಗಿ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಲಿಂಗಾನುಪಾತದ ಅಂತರ ಹೆಚ್ಚುತ್ತಿದೆ. 1 ಸಾವಿರ ಪುರುಷರಿಗೆ 930 ಮಹಿಳೆಯರು ಇದ್ದಾರೆ. ಕಾನೂನಿನ ಕಣ್ತಪ್ಪಿಸಿ ಭ್ರೂಣ ಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಲಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.
‘ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ಮಾಡಬೇಕು. ಭ್ರೂಣ ಲಿಂಗ ಪತ್ತೆ ಮಾಡುತ್ತಿರುವ ಸೆಂಟರ್ಗಳ ವೈದ್ಯರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕು. ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಿ’ ಎಂದು ಆದೇಶಿಸಿದರು.
‘ಭ್ರೂಣ ಲಿಂಗ ಪತ್ತೆಯು ಅನಾಗರಿಕ ಸಮಾಜದ ಲಕ್ಷಣ. ಇತ್ತೀಚಿನ ವರ್ಷಗಳಲ್ಲಿ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಈ ತಪ್ಪು ಮಾಡುತ್ತಿದ್ದಾರೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವೆಂದು ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಫಲಕ ಅಳವಡಿಸಬೇಕು’ ಎಂದು ತಿಳಿಸಿದರು.
ನೋಟಿಸ್ಗೆ ಸೂಚನೆ: ‘ಪ್ರಸಕ್ತ ವರ್ಷದಲ್ಲಿ 5 ಹೆರಿಗೆ ಮನೆಯಲ್ಲೇ ಆಗಿವೆ. ಈ ಸಂಬಂಧ ತಾಲ್ಲೂಕು ಆರೋಗ್ಯಾಧಿಕಾರಿಗಳು ಆಯಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ನೋಟಿಸ್ ಜಾರಿ ಮಾಡಿ. ನಿಯಮಿತವಾಗಿ ಗರ್ಭಿಣಿಯರ ಮನೆಗೆ ಹೋಗಿ ಪರಿಶೀಲನೆ ಮಾಡುವ ಆಶಾ ಕಾರ್ಯಕರ್ತೆಯರು ಗರ್ಭಿಣಿಯರಿಗೆ ಹೆರಿಗೆ ದಿನಾಂಕ ತಿಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.
‘ಜಿಲ್ಲೆಯಲ್ಲಿ ಶೇ 40ರಷ್ಟು ಹೆರಿಗೆಗಳು ಶಸ್ತ್ರಚಿಕಿತ್ಸೆ ಮೂಲಕ ಆಗಿವೆ. ರಾಜ್ಯದ ಸರಾಸರಿ ಶೇ 35 ಇದ್ದು, ಜಿಲ್ಲೆಯಲ್ಲಿ ಈ ಪ್ರಮಾಣಕ್ಕಿಂತಲೂ ಹೆಚ್ಚಿದೆ. ಉದ್ದೇಶಪೂರ್ವಕವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆಯೇ ಮತ್ತು ಯಾವ ವೈದ್ಯರು ಹೆಚ್ಚಿನ ಪ್ರಮಾಣದಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿದ್ದರೆ ಶಿಸ್ತುಕ್ರಮ ಜರುಗಿಸಿ’ ಎಂದು ಆದೇಶಿಸಿದರು.
27 ಡೆಂಗಿ ಪ್ರಕರಣ: ‘ಸೊಳ್ಳೆಯಿಂದ ಡೆಂಗಿ ಜ್ವರ ಬರುತ್ತದೆ. ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಮರಿ ಮಾಡುತ್ತವೆ. ಜಿಲ್ಲೆಯಲ್ಲಿ ಈ ಬಾರಿ ಜನವರಿಯಿಂದ ಜೂನ್ ಅಂತ್ಯದವರೆಗೆ 27 ಡೆಂಗಿ ಪ್ರಕರಣ ಮತ್ತು 87 ಚಿಕೂನ್ ಗುನ್ಯ ಪ್ರಕರಣ ವರದಿಯಾಗಿವೆ. ಮನೆ ಮನೆಗೆ ತೆರಳಿ ಡೆಂಗಿ ಮತ್ತು ಚಿಕೂನ್ ಗುನ್ಯ ಕಾಯಿಲೆ ಸಂಬಂಧ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಕಮಲಾ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್ಕುಮಾರ್, ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್ಸಿಎಚ್) ಡಾ.ಚಂದನ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಜಗದೀಶ್, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಎಂ.ಚಾರಿಣಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.