ADVERTISEMENT

ಎಂವಿಕೆ ಗೋಲ್ಡನ್ ಡೇರಿ ನಿರ್ಮಾಣಕ್ಕೆ ಸರ್ಕಾರ ಅಡ್ಡಿ: ಒಗ್ಗೂಡಿ ಹೋರಾಡುವ ಎಚ್ಚರಿಕೆ

ಎಂವಿಕೆ ಗೋಲ್ಡನ್ ಡೇರಿ ಟೆಂಡರ್‌ ರದ್ದು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 13:31 IST
Last Updated 21 ಮಾರ್ಚ್ 2020, 13:31 IST

ಕೋಲಾರ: ‘ಎಂವಿಕೆ ಗೋಲ್ಡನ್ ಡೇರಿ ನಿರ್ಮಾಣಕ್ಕೆ ಅಡ್ಡಿಪಡಿಸಿ ಸರ್ಕಾರದಿಂದ ಹೊರಡಿಸಿರುವ ಆದೇಶ ಹಿಂಪಡೆಯದಿದ್ದರೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಒಗ್ಗೂಡಿ ಹೋರಾಟ ನಡೆಸುತ್ತೇವೆ’ ಎಂದು ಕೋಚಿಮುಲ್‌ ಅಧ್ಯಕ್ಷ ಹಾಗೂ ಶಾಸಕ ಕೆ.ವೈ.ನಂಜೇಗೌಡ ಎಚ್ಚರಿಕೆ ನೀಡಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೋಚಿಮುಲ್‌ ವಿಭಜನೆ ಮಾಡಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸುಧಾಕರ್ ಒತ್ತಾಯಿಸಿದ್ದಾರೆ. ಆದರೆ, ಅವರು ಕೋಲಾರ ಜಿಲ್ಲೆಯ ಎಂವಿಕೆ ಗೋಲ್ಡನ್ ಡೇರಿ ಟೆಂಡರ್‌ ಪ್ರಕ್ರಿಯೆಗೆ ಅಡ್ಡಗಾಲು ಹಾಕಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಸುಧಾಕರ್ ಸಹಕಾರ ಸಚಿವರ ಮೇಲೆ ಒತ್ತಡ ತಂದು ಟೆಂಡರ್‌ ಸ್ಥಗಿತಗೊಳಿಸುವಂತೆ ಆದೇಶ ಮಾಡಿಸಿದ್ದಾರೆ, ಇದರಿಂದ ಬೇಸರವಾಗಿದೆ. ಈ ವಿಚಾರವಾಗಿ ಎಲ್ಲರೂ ಒಟ್ಟಿಗೆ ಹೋರಾಟ ನಡೆಸುತ್ತೇವೆ. ನಾವೇನೂ ಚಿಲ್ಲರೆ ರಾಜಕಾರಣಿಗಳಲ್ಲ. ಅಭಿವೃದ್ಧಿ ಕೆಲಸಕ್ಕೆ ಅಡ್ಡಿಪಡಿಸಿದರೆ ಹೋರಾಟ ಮಾಡುವುದು ಗೊತ್ತಿದೆ. ಟೆಂಡರ್ ಸ್ಥಗಿತಕ್ಕೆ ಆದೇಶ ಹೊರಡಿಸುವ ಮುನ್ನ ಜಿಲ್ಲೆಯ ಜನಪ್ರತಿನಿಧಿಗಳ ಗಮನಕ್ಕೂ ತರಬೇಕಿತ್ತು’ ಎಂದರು.

ADVERTISEMENT

‘ಟೆಂಡರ್‌ ಸ್ಥಗಿತ ಆದೇಶದ ವಿಚಾರವಾಗಿ ಸಚಿವ ಸುಧಾಕರ್ ಜತೆಗೆ ಚರ್ಚಿಸಿದ್ದೇವೆ. ಸಹಕಾರ ಸಚಿವರೊಂದಿಗೆ ಚರ್ಚಿಸಿ ಆದೇಶ ರದ್ದು ಮಾಡಿಸುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನ ಅಣ್ಣ ತಮ್ಮಂದಿರಂತೆ ಇದ್ದಾರೆ. ಕೋಚಿಮುಲ್‌ನಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೋಗಬೇಕಾದ ಭಾಗವನ್ನು ವಿಂಗಡಣೆ ಮಾಡಲಿ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ಆಗಬೇಕು’ ಎಂದು ಹೇಳಿದರು.

‘ಕೋಚಿಮುಲ್ ವಿಭಜನೆ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಜನಪ್ರತಿನಿಧಿಗಳು ಸಭೆಗೆ ಗೈರಾಗಿದ್ದರು. ಈ ಸಂಗತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತಂದು ಮೂರ್ನಾಲ್ಕು ದಿನದಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವಿವರಿಸಿದರು.

ಒಗ್ಗಟ್ಟಿನಿಂದ ಇದ್ದೇವೆ: ‘ಕೋಚಿಮುಲ್‌ ವಿಚಾರದಲ್ಲಿ ಕೆಲ ಕಾಣದ ಕೈಗಳು ಅವಿಭಜಿತ ಕೋಲಾರ ಜಿಲ್ಲೆಯ ಜನರ ಮಧ್ಯೆ ಬೆಂಕಿ ಹಚ್ಚುವ ಕೆಲಸಕ್ಕೆ ಮುಂದಾಗಿವೆ. ಇದಕ್ಕೆ ಅವಕಾಶ ಕೊಡುವುದಿಲ್ಲ. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಇದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.