ಬೇತಮಂಗಲ: ದೇಶಕ್ಕೆ ನಮಸ್ತೆ ಟ್ರಂಪ್ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಕೊರೊನಾಗೆ ಆಹ್ವಾನ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಆರೋಪಿಸಿದರು.
ಪಟ್ಟಣದಲ್ಲಿ ಆರೋಗ್ಯ ಹಸ್ತ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವದ್ಯಾಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ದೂರ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ದೂರಿದರು.
ರಾಜ್ಯದ ಜನರ ಆರೋಗ್ಯ ದೃಷ್ಠಿಯಿಂದ ಕೆಸಿಸಿಸಿ ಅಧ್ಯಕ್ಷರು ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಹಸ್ತ ಯೋಜನೆಯ ಮೂಲಕ ಪ್ರತಿಯೊಬ್ಬರ ಆರೋಗ್ಯ ಪರೀಕ್ಷೆ ಮತ್ತು ಅವಶ್ಯಕ ಚಿಕಿತ್ಸೆಗೆ ಮುಂದಾಗಿದ್ದಾರೆ ಎಂದರು.
ವೈದ್ಯರ ನೇತೃತ್ವದಲ್ಲಿ ಆಯಾ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಮನೆ-ಮನೆಗೂ ಭೇಟಿ ನೀಡಿ ಪ್ರತಿಯೊಬ್ಬರಆರೋಗ್ಯ ಪರೀಕ್ಷೆ ನಡೆಸಲಾಗುವುದು. ಯಾವುದೇ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಜಿಲ್ಲೆ ಅಥವಾ ತಾಲ್ಲೂಕು ವೈದ್ಯಾಧಿಕಾರಿಗಳ ಮೂಲಕ ಚಿಕಿತ್ಸೆಗೆ ಒಳಪಡಿಸುತ್ತೇವೆ. ಕ್ಷೇತ್ರದ ಶಾಸಕರು ಈ ಆರೋಗ್ಯ ಹಸ್ತ ಯೋಜನೆಯ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದರು.
ಶಾಸಕಿ ಎಂ.ರೂಪಕಲಾ ಮಾತನಾಡಿ, ಕೊರೊನಾ ವಿಚಾರದಲ್ಲಿ ಕೇರಳ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಇಂತಹ ಕ್ರಮ ಕೈಗೊಳ್ಳುವಲ್ಲಿ ನಮ್ಮ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಭಾರತವು ದಿನೇ ದಿನೇ ಆರ್ಥಿಕತೆಯಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಇದು ಕೇಂದ್ರ, ರಾಜ್ಯ ಸರ್ಕಾರಗಳ ಸಾಧನೆ ಎಂದು ದೂರಿದರು.
ಎಪಿಎಂಸಿ ಅಧ್ಯಕ್ಷ ವಿಜಯರಾಘವ ರೆಡ್ಡಿ, ಮಾಜಿ ಅಧ್ಯಕ್ಷ ವಿಜಯಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು ಲಕ್ಷ್ಮಿನಾರಾಯಣ್, ನಾರಾಯಣ ಸ್ವಾಮಿ, ಎಪಿಎಂಸಿ ನಿರ್ದೇಶಕ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಕೃಷ್ಣಾ ರೆಡ್ಡಿ, ನಗರ ಅಧ್ಯಕ್ಷ ಮುದಲೈಮುತ್ತು, ವಕೀಲ ಪದ್ಮನಾಭರೆಡ್ಡಿ, ಮಂಜು, ಮುಖಂಡ ಅಯ್ಯಪಲ್ಲಿ ಮಂಜು, ದುರ್ಗಾಪ್ರಸಾದ್, ಶ್ರೀಧರ ರೆಡ್ಡಿ, ವಿಎಸ್ಎಸ್ಎನ್ ಅಧ್ಯಕ್ಷ ಶಂಕರ್, ನಿರ್ದೇಶಕ ಸುರೇಂದ್ರಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.