ಕೋಲಾರ: ‘ಪ್ರವಾಹ ಪರಿಸ್ಥಿತಿಯಿಂದ ನಲುಗಿರುವ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಹಣ ಒಂದು ತಾಲ್ಲೂಕಿಗೂ ಸಾಕಾಗುವುದಿಲ್ಲ’ ಎಂದು ಶಾಸಕ ಕೆ.ವೈ.ನಂಜೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರವಾಹದಿಂದ ಉತ್ತರ ಕರ್ನಾಟಕದ 17 ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿಯಿದೆ. ಜನರು ಮನೆ, ಬೆಳೆ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರವು ಹೆಚ್ಚಿನ ಅನುದಾನ ನೀಡಿ ಪರಿಹಾರ ಕಾರ್ಯಗಳಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.
‘ಕೇಂದ್ರವು ಈವರೆಗೆ ₹ 126 ಕೋಟಿ ಬಿಡುಗಡೆ ಮಾಡಿದೆ. ಈ ಹಣವು ಕನಿಷ್ಠ ಒಂದು ತಾಲ್ಲೂಕಿನ ಪರಿಹಾರ ಕಾರ್ಯಕ್ಕೂ ಸಾಕಾಗುವುದಿಲ್ಲ. 17 ಜಿಲ್ಲೆಗಳಲ್ಲಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದ್ದು, ಕೇಂದ್ರವು ರಾಜ್ಯದ ಮನವಿಗೆ ಸ್ಪಂದಿಸಬೇಕು’ ಎಂದು ಹೇಳಿದರು.
‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ನಷ್ಟದ ವಸ್ತುಸ್ಥಿತಿಯನ್ನು ಕೇಂದ್ರದ ನಾಯಕರ ಗಮನಕ್ಕೆ ತಂದು ಹೆಚ್ಚಿನ ಅನುದಾನ ಕೊಡುವಂತೆ ಒತ್ತಡ ಹೇರಬೇಕು’ ಎಂದರು.
ಒನ್ ಮ್ಯಾನ್ ಶೋ: ‘ಯಡಿಯೂರಪ್ಪ ಅವರು ಒಂದು ಪಕ್ಷದಿಂದ ಗೆದ್ದ ಶಾಸಕರ ರಾಜೀನಾಮೆ ಕೊಡಿಸಿ ತರಾತುರಿಯಲ್ಲಿ ಮುಖ್ಯಮಂತ್ರಿಯಾದರು. ಸಂವಿಧಾನಬದ್ಧವಾಗಿ ಆಯ್ಕೆಯಾಗಿದ್ದ ಸರ್ಕಾರ ಕೆಡವಿ ರಾಜ್ಯದ ಜನರಿಗೆ ಮೋಸ ಮಾಡಿದರು. ಮುಖ್ಯಮಂತ್ರಿ ಆಗುವಾಗ ಅವರಿಗಿದ್ದ ಆತುರ ಸಚಿವರ ಸಂಪುಟ ರಚನೆಯಲ್ಲಿ ಇಲ್ಲ. ರಾಜ್ಯದಲ್ಲಿ ಒನ್ ಮ್ಯಾನ್ ಶೋ ನಡೆಯುತ್ತಿದೆ’ ಎಂದು ವ್ಯಂಗ್ಯವಾಡಿದರು.
‘ಸರ್ಕಾರ ಇನ್ನೂ ಸಂಪೂರ್ಣವಾಗಿ ರಚನೆಯಾಗಿಲ್ಲ. ಆದರೆ, ಪ್ರತಿನಿತ್ಯ ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಇದು ಸರಿಯಲ್ಲ. ಯಾವುದೇ ಪಕ್ಷ ಸರ್ಕಾರ ರಚಿಸಿದಾಗ ತನಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳುವುದು ಸಹಜ. ಆದರೆ, ಪೂರ್ಣ ಪ್ರಮಾಣದ ಸರ್ಕಾರ ರಚನೆಗೂ ಮುನ್ನವೇ ಯಡಿಯೂರಪ್ಪ ಅವರು ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ’ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.