ಬಂಗಾರಪೇಟೆ: ತಾಲ್ಲೂಕಿನ ಡಿ.ಕೆ.ಹಳ್ಳಿ ಗ್ರಾಮ ಪಂಯಾಚಿತಿ ವ್ಯಾಪ್ತಿಯಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಮತ್ತು ಬೆಂಗಳೂರಿನ ವೈದೇಹಿ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಜೆ. ಸುರೇಶ್ ಮಾತನಾಡಿ, ‘ಆಧುನಿಕ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಹಲವು ರೋಗಗಳಿಗೆ ಕಾರಣವಾಗುತ್ತಿವೆ. ದುಶ್ಚಟಗಳಿಂದ ಯುವ ಜನಾಂಗ ದೂರವಿರಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಹೇಳಿದರು.
‘ಆರೋಗ್ಯವೇ ನಮಗೆ ನಿಜವಾದ ಸಂಪತ್ತು. ಹೀಗಾಗಿ, ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಆದರೆ ಇಂದು ಆರೋಗ್ಯಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಬಡವರು ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ದುಸ್ತರವಾಗಿದೆ. ಹೀಗಾಗಿ, ಗ್ರಾಮ ಪಂಚಾಯಿತಿ ಮೂಲಕ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಇದು ಬಡವರು ಮತ್ತು ಕೂಲಿ ಕಾರ್ಮಿಕರು ವರದಾನವಾಗಿದೆ’ ಎಂದರು.
ಶಿಬಿರದಲ್ಲಿ ಹೃದ್ರೋಗ, ಸಾಮಾನ್ಯ ಆರೋಗ್ಯ ತಪಾಸಣೆ, ಮೂಳೆ ತಪಾಸಣೆ, ಎಕೊ ಪರೀಕ್ಷೆ ಸೇರಿದಂತೆ ಹಲವು ತಪಾಸಣೆಗಳನ್ನು ಉಚಿತವಾಗಿ ಮಾಡಲಾಗುತ್ತಿದೆ. ಉಚಿತ ಆರೋಗ್ಯ ಶಿಬಿರವನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಶಿಬಿರಗಳಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ದಂತ ಚಿಕಿತ್ಸೆ, ಹೃದ್ರೋಗ ಮತ್ತು ರಕ್ತದೊತ್ತಡ, ರಕ್ತ ಪರೀಕ್ಷೆ, ಮಧುಮೇಹ ಪರೀಕ್ಷೆ, ಎಕೊ ಪರೀಕ್ಷೆ ಮಾಡಲಾಯಿತು.
ಆರೋಗ್ಯಕರ ಜೀವನಶೈಲಿ ಮತ್ತು ನಿಯಮಿತ ತಪಾಸಣೆಗಳ ಮಹತ್ವ, ಮಧುಮೇಹದಂತಹ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ತಪಾಸಣೆಯಲ್ಲಿ 200ಕ್ಕೂ ಹೆಚ್ಚಿನ ಜನರು ಭಾಗವಹಿಸಿದ್ದು, ಅಗತ್ಯವಿರುವವರಿಗೆ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು.
ಶಿಬಿರದಲ್ಲಿ ಪಿಡಿಒ ಭಾಸ್ಕರ್, ವೈದೇಹಿ ಆಸ್ಪತ್ರೆ ವೈದ್ಯರಾದ ಡಾ.ಅಜಯ್ ಕೃಷ್ಣ, ಡಾ.ಸಾಗರ್, ಡಾ.ವರ್ಷ, ಡಾ.ವಿಂಧ್ಯಾ, ಎಕೊ ತಂತ್ರಜ್ಞಾಧಿಕಾರಿ ಕಾವ್ಯ, ಸಂಯೋಜಕ ಸುರೇಶ್, ಪಿಆರ್ಒ ಚಂದ್ರು ಹಾಜರಿದ್ದರು.
.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.