
ಮುಳಬಾಗಿಲು: ನಗರದಲ್ಲಿ ಕೋಲಾರ ಜಿಲ್ಲಾ ಪೊಲೀಸರು ದ್ವಿಚಕ್ರ ವಾಹನ ಸವಾರರಿಗೆ ಉಚಿತ ಹೆಲ್ಮೆಟ್ ವಿತರಿಸುವ ಮೂಲಕ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಗುರುವಾರ ಜಾಗೃತಿ ಅಭಿಯಾನ ನಡೆಸಿದರು.
ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಮುಳಬಾಗಿಲು ನಗರದ ನೇತಾಜಿ ಕ್ರೀಡಾಂಗಣದಲ್ಲಿ 300 ಮಂದಿಗೆ ಉಚಿತ ಹೆಲ್ಮೆಟ್ ವಿತರಿಸಿದರು. ಸರತಿ ಸಾಲಿನಲ್ಲಿ ನಿಂತಿದ್ದ ಸವಾರರ ವಾಹನ ದಾಖಲೆ ಪರಿಶೀಲಿಸಿ ಹೆಲ್ಮಟ್ ವಿತರಿಸಿದರು.
ಜೊತೆಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲು ಟ್ರಾಫಿಕ್ ಸಿಗ್ನಲ್ ದೀಪ ಪ್ರಾರಂಭಕ್ಕೆ ಚಾಲನೆ ನೀಡಿದರು.
ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ತಾಲ್ಲೂಕಿನಲ್ಲಿ ಎಲ್ಲರೂ ಹೆಲ್ಮೆಟ್ ಧರಿಸಿ ಸಂಚರಿಸಿ. ಹೆಲ್ಮೆಟ್ ಇಲ್ಲದೆ ಸಂಚರಿಸುವಾಗ ಪೊಲೀಸರು ಹಿಡಿದರೆ ಯಾವುದೇ ಕಾರಣಕ್ಕೂ ಪರಿಚಯಸ್ಥ ಅಧಿಕಾರಿಗಳಿಗೆ ಹಾಗೂ ಜನ ಪ್ರತಿನಿಧಿಗಳಿಗೆ ಕರೆ ಮಾಡಿ ಸಹಾಯ ಕೇಳಬೇಡಿ ಎಂದರು.
ನಗರದಲ್ಲಿ ಅಡ್ಡಾದಿಡ್ಡಿ ಸಂಚಾರದಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಹಾಗಾಗಿ ಅಪಘಾತ ತಡೆಯಲು ನಗರದಲ್ಲಿ ಸಿಗ್ನಲ್ ದೀಪ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, ಜಿಲ್ಲೆಯಲ್ಲಿ ಡಿ.1 ರಿಂದ ಹೆಲ್ಮೆಟ್ ಕಡ್ಡಾಯಕ್ಕೆ ಗುರುವಾರದವರೆಗೆ ಜಾಗೃತಿ ಮೂಡಿಸಲಾಗಿದೆ. ಶುಕ್ರವಾರದಿಂದ ಯಾರೇ ಹೆಲ್ಮೆಟ್ ಇಲ್ಲದೆ ಸಂಚರಿಸಿದರೆ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುವುದು. ಜನವರಿ ಮೊದಲ ವಾರದಲ್ಲಿ ಪೋಕ್ಸೊ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.
ಎ.ಎಸ್.ಪಿ ಮನಿಷಾ, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಕೆ.ಸತೀಶ್, ಸಂಘನಾಥ, ಸಬ್ ಇನ್ಸ್ಪೆಕ್ಟರ್ ಎಚ್.ಡಿ.ವಿದ್ಯಾಶ್ರೀ, ಅರುಣ್ ಗೌಡ ಪಾಟೀಲ್, ರಘುಪತಿ ರೆಡ್ಡಿ, ಜಗದೀಶ್, ತಾಯಲೂರು ಗೋಪಿನಾಥ್, ಸುಬ್ಬರಾಯಪ್ಪ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.