ಕೋಲಾರ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗಂಗಾಧರ ಎಂಬಾತನಿಗೆ 10 ವರ್ಷ ಜೈಲು ಶಿಕ್ಷೆ ಮತ್ತು ₹ 15 ಸಾವಿರ ದಂಡ ವಿಧಿಸಿದೆ.
ಮುಳಬಾಗಿಲು ತಾಲ್ಲೂಕಿನ ಎಂ.ಮಾರಂಡಹಳ್ಳಿಯ ಗಂಗಾಧರ ಅದೇ ಗ್ರಾಮದ ಬಾಲಕಿಯನ್ನು 2019ರ ಜ.17ರಂದು ಅಪಹರಿಸಿ ಆಂಧ್ರಪ್ರದೇಶದ ಪಲಮನೇರಿನ ಸಂಬಂಧಿಕರ ಮನೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಮತ್ತು ಅಪಹರಣ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಗಂಗಾಧರನನ್ನು ಬಂಧಿಸಿದ್ದರು.
ನಂತರ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಗಂಗಾಧರನಿಗೆ ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದರು.
ಜಾತಿ ನಿಂದನೆ: ಜೈಲು ಶಿಕ್ಷೆ
ಜಾತಿ ನಿಂದನೆ ಪ್ರಕರಣ ಸಂಬಂಧ ಕೆಜಿಎಫ್ ತಾಲ್ಲೂಕಿನ ಬಳುವನಹಳ್ಳಿಯ ಮುರುಗೇಶ್ ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ಮತ್ತು ₹ 15 ಸಾವಿರ ದಂಡ ವಿಧಿಸಿದೆ.
ಬಳುವನಹಳ್ಳಿಯಲ್ಲಿ ಅಂಗಡಿ ಇಟ್ಟುಕೊಂಡಿರುವ ಮುನಿರಾಜು ಮತ್ತು ಮುರುಗೇಶ್ನ ತಂದೆ ಸಂಪಂಗಿರಾಮೇಗೌಡರ ನಡುವೆ 2019ರ ಅ.27ರಂದು ಚಿಲ್ಲರೆ ವಿಚಾರವಾಗಿ ಜಗಳವಾಗಿತ್ತು. ಬಳಿಕ ಮುರುಗೇಶ್, ಮುನಿರಾಜುರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದ. ನಂತರ ಬೇತಮಂಗಲ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಮುರುಗೇಶ್ಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.