ಕೋಲಾರ: ‘ಸೂಕ್ತ ಮಾರ್ಗದರ್ಶನದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಸಾಧ್ಯ’ ಎಂದು ಲೇಖಕ ಅಮರೇಶ್ ರಾಥೋಡ್ ಅಭಿಪ್ರಾಯಪಟ್ಟರು.
ನಗರದ ವಿವೇಕ್ ಇನ್ಫೋಟೆಕ್ ಸಂಸ್ಥೆಯ ವತಿಯಿಂದ ಭಾನುವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿ, ‘ಸರ್ಕಾರಿ ಕೆಲಸಕ್ಕೆ ಸೇರಿಕೊಳ್ಳಲು ವಿವಿಧ ರೀತಿಯ ಸ್ಪರ್ಧಾ ಪರೀಕ್ಷೆಗಳನ್ನು ಎದುರಿಸಬೇಕು. ಇದರ ಯಶಸ್ಸಿಗೆ ಮಾರ್ಗದರ್ಶನ, ನಿರಂತರ ಕಲಿಕೆ ಅವಶ್ಯಕ’ ಎಂದು ತಿಳಿಸಿದರು.
‘ವಿದ್ಯಾರ್ಥಿಗಳು ಗುರಿ ಸಾಧನೆ ಮಾಡಲು ಗುರುಗಳ ಮಾಗದರ್ಶನ ಪಡೆದುಕೊಳ್ಳಬೇಕು. ಆಗ ಮಾತ್ರ ಕಡಿಮೆ ಸಮಯದಲ್ಲಿ ಹೆಚ್ಚು ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಇದರ ಜತೆಗೆ ಗುರುಗಳ ಆಯ್ಕೆಯೂ ಸಹ ಸೂಕ್ತವಾಗಿರಬೇಕು’ ಎಂದು ಹೇಳಿದರು.
‘ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಯಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಈಗಿನಿಂದಲೇ ಪರೀಕ್ಷೆಗೆ ತಯಾರು ನಡೆಸಿಕೊಳ್ಳಬೇಕು. ಅರ್ಜಿ ಹಾಕಿರುವ ಕ್ಷೇತ್ರದ ಕುರಿತು ಅರಿವು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಹಿಂದೆ ನಮ್ಮಲ್ಲಿ ಗುರುಕುಲ ಪದ್ಧತಿ ಇತ್ತು. ಸಾಕಷ್ಟು ವಿದ್ಯಾರ್ಥಿಗಳು ಗುರುಗಳ ಬಳಿ ಕುಳಿತು ಶ್ರದ್ಧೆಯಿಂದ ಕಲಿಯುತ್ತಿದ್ದರು. ಇದರಿಂದ ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆ ಹೆಚ್ಚಾಗುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಅಂತರ ಹೆಚ್ಚಾಗಿದೆ. ಇದರಿಂದ ಕಲಿಕೆಯೂ ಸಹ ಹಿಂದೆ ಉಳಿಸಿದೆ’ ಎಂದು ವಿಷಾದವ್ಯಕ್ತಪಡಿಸಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಪ್ರಮೋದ್ ಕುಮಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಜಿ.ಮುರಳಿ, ವ್ಯವಸ್ಥಾಪಕ ಭಾನುಪ್ರಕಾಶ್, ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಖೇಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.