ಕೋಲಾರ: ‘ಹಿಂದೂ ಜಾಗರಣಾ ವೇದಿಕೆಯು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜ.26ರಂದು ದ್ವಿತೀಯ ತ್ರೈವಾರ್ಷಿಕ ಸಮ್ಮೇಳನ ಹಮ್ಮಿಕೊಂಡಿದೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಡಾ.ಸಿ.ಕೆ.ಶಿವಣ್ಣ ತಿಳಿಸಿದರು.
ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಹಿಂದುತ್ವದ ಸ್ಥಿತಿಗತಿ ಬಗ್ಗೆ ಅವಲೋಕನ ನಡೆಸಲು 3 ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಲಾಗುತ್ತದೆ. ಜ.26ರಂದು ಮಧ್ಯಾಹ್ನ 2.30ಕ್ಕೆ ಶೋಭಾಯಾತ್ರೆ ಹಾಗೂ ಸಂಜೆ 4.30ಕ್ಕೆ ಸಾರ್ವಜನಿಕರ ಸಭೆ ನಡೆಸಲಾಗುತ್ತದೆ’ ಎಂದರು.
‘ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾಗುವ ಶೋಭಾಯಾತ್ರೆಯು ಎಂ.ಜಿ ರಸ್ತೆ, ಶಾರದಾ ಚಿತ್ರಮಂದಿರ ರಸ್ತೆ, ಕಾಳಮ್ಮಗುಡಿ ರಸ್ತೆ ಮೂಲಕ ಸಾಗಲಿದೆ. ದಕ್ಷಿಣ ಪ್ರಾಂತ್ಯದ 18 ಜಿಲ್ಲೆಗಳ ಸುಮಾರು 3 ಸಾವಿರ ಕಾರ್ಯಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ವಿವರಿಸಿದರು.
‘ನಾಗಲಾಪುರ ಸಂಸ್ಥಾನ ಮಠದ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುತ್ತಾರೆ. ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಭಾಷಣ ಮಾಡುತ್ತಾರೆ’ ಎಂದು ಮಾಹಿತಿ ನೀಡಿದರು.
‘ಹಿಂದೂ ಧರ್ಮವನ್ನು ಜಾಗೃತಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ತ್ರೈಮಾಸಿಕ ಸಮ್ಮೇಳನ ಆಯೋಜಿಸಲಾಗಿದೆ. ಹಿಂದೂ ಸಮಾಜದ ಸರ್ವತ್ತೋಮುಖ ಅಭಿವೃದ್ಧಿ ಮತ್ತು ಜಾಗೃತಿಗಾಗಿ ನಡೆಯುತ್ತಿರುವ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಆಗಮಿಸುತ್ತಾರೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶ್ರೀನಾಥ್ ಹೇಳಿದರು.
‘ಹಿಂದೂ ಜಾಗರಣಾ ವೇದಿಕೆಯು ೪೦ ವರ್ಷಗಳಿಂದ ಹಿಂದೂ ಧರ್ಮದ ಏಳಿಗೆಗೆ ಶ್ರಮಿಸುತ್ತಿದೆ. ಸಮ್ಮೇಳನದ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ’ ಎಂದು ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಧನುಷ್ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.