ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 13:53 IST
Last Updated 19 ಸೆಪ್ಟೆಂಬರ್ 2020, 13:53 IST

ಕೋಲಾರ: ‘ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು’ ಎಂದು ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ವೆಂಕಟೇಶಪ್ಪ ಒತ್ತಾಯಿಸಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಲ್ಲಿರುವ ಮಾದಿಗ ಮತ್ತು ಅದರ ಉಪ ಜಾತಿಯವರಿಗೆ ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಈ ಸಂಬಂಧ 1997ರಿಂದ ಸತತ ಹೋರಾಟ ನಡೆಸುತ್ತಿದ್ದೇವೆ. ಹೀಗಾಗಿ ಸರ್ಕಾರ 2004ರಲ್ಲಿ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ವಿಚಾರಣಾ ಆಯೋಗ ರಚಿಸಿತು’ ಎಂದರು.

‘ಸದಾಶಿವ ಆಯೋಗವು 2012ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಮಾದಿಗ ಮತ್ತು ಅದರ ಉಪ ಜಾತಿಗಳಿಗೆ ಶೇ 6ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿದರು. ವರದಿಯಲ್ಲಿ ಪರಿಶಿಷ್ಟ ಜಾತಿ ಜನಾಂಗವು ಶೇ 55ರಷ್ಟಿದೆ ಎಂದು ಹೇಳಲಾಗಿದ್ದರೂ ಸರ್ಕಾರ ಇದೀಗ ಶೇ 33ರಷ್ಟಿದೆ ಎಂದು ಹೇಳುವ ಮೂಲಕ ಜನಾಂಗಕ್ಕೆ ಮೋಸ ಮಾಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಆಯೋಗದ ವರದಿ ಜಾರಿ ಸಂಬಂಧ ಹಿಂದಿನ ಸರ್ಕಾರಗಳು ನೀಡಿದ ಭರವಸೆಗಳೆಲ್ಲಾ ಹುಸಿಯಾಗಿವೆ. ವರದಿ ಜಾರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ನೀಡಿದೆ. ಈಗಿನ ಸರ್ಕಾರವಾದರೂ ವರದಿ ಅನುಷ್ಠಾನಗೊಳಿಸಿ ಜನಾಂಗಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ರಾಜ್ಯದಲ್ಲೆಡೆ ಉಗ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಸಮಿತಿ ಮಹಾ ಪ್ರಧಾನ ಕಾರ್ಯದರ್ಶಿ ವಿ.ಶ್ರೀನಿವಾಸ್, ಉಪಾಧ್ಯಕ್ಷರಾದ ಎಂ.ಎಸ್.ನಾರಾಯಣಸ್ವಾಮಿ, ವೆಂಕಟೇಶ್, ಸಿ.ನಾರಾಯಣಸ್ವಾಮಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೆಂಕಟರತ್ನಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.