ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ

ಕುವೆಂಪು ನಗರ ನಿವಾಸಿಗಳ ಧರಣಿ: ನಗರಸಭೆ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 8 ಮೇ 2020, 15:06 IST
Last Updated 8 ಮೇ 2020, 15:06 IST
ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಕೋಲಾರದ ಕುವೆಂಪು ನಗರ ನಿವಾಸಿಗಳು ಶುಕ್ರವಾರ ಧರಣಿ ನಡೆಸಿದರು.
ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಕೋಲಾರದ ಕುವೆಂಪು ನಗರ ನಿವಾಸಿಗಳು ಶುಕ್ರವಾರ ಧರಣಿ ನಡೆಸಿದರು.   

ಕೋಲಾರ: ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನಗರದ 24ನೇ ವಾರ್ಡ್‌ ವ್ಯಾಪ್ತಿಯ ಕುವೆಂಪು ನಗರ ನಿವಾಸಿಗಳು ಶುಕ್ರವಾರ ಧರಣಿ ನಡೆಸಿದರು.

‘ಬಡಾವಣೆಯಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ನಗರಸಭೆಯಿಂದ ಸಮರ್ಪಕವಾಗಿ ಟ್ಯಾಂಕರ್‌ ನೀರು ಪೂರೈಸುತ್ತಿಲ್ಲ. ಕೊಳವೆ ಬಾವಿಗಳಲ್ಲಿ ನೀರು ಲಭ್ಯವಿದ್ದರೂ ಪಂಪ್‌ ಮೋಟರ್‌ ಕೆಟ್ಟಿರುವುದರಿಂದ ನೀರು ಪೂರೈಕೆಯಾಗುತ್ತಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಮೂರ್ನಾಲ್ಕು ಕಿಲೋ ಮೀಟರ್‌ ದೂರದಿಂದ ನೀರು ತರುವ ಪರಿಸ್ಥಿತಿಯಿದೆ. ನೀರು ಲಭ್ಯವಿರುವ ಕೊಳವೆ ಬಾವಿಗಳ ಪಂಪ್‌ ಮೋಟರ್‌ ರಿಪೇರಿ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಖಾಸಗಿ ಟ್ಯಾಂಕರ್‌ ಮಾಲೀಕರಿಗೆ ಹಣ ಕೊಟ್ಟು ನೀರು ಖರೀದಿಸುವ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದು ಬಡಾವಣೆ ನಿವಾಸಿ ಬಿ.ಬೈಚಪ್ಪ ಅಳಲು ತೋಡಿಕೊಂಡರು.

ADVERTISEMENT

‘ಸರ್ಕಾರ ಜಿಲ್ಲಾಧಿಕಾರಿಯನ್ನು ನಗರಸಭೆಗೆ ಆಡಳಿತಾಧಿಕಾರಿಯಾಗಿ ನೇಮಿಸಿದೆ. ಕೊರೊನಾ ಸೋಂಕಿನ ಕಾರ್ಯ ಒತ್ತಡದಲ್ಲಿರುವ ಜಿಲ್ಲಾಧಿಕಾರಿ ಅವರಿಗೆ ನಗರದ ನೀರಿನ ಸಮಸ್ಯೆ ಬಗ್ಗೆ ಗಮನಹರಿಸಲು ಕಾಲಾವಕಾಶ ಇಲ್ಲವಾಗಿದೆ. ನಗರಸಭೆ ಅಧಿಕಾರಿಗಳು ನೀರಿನ ವಿಚಾರವಾಗಿ ಜಿಲ್ಲಾಧಿಕಾರಿಗೆ ಸುಳ್ಳು ಮಾಹಿತಿ ನೀಡಿ ಸಮಸ್ಯೆ ಮರೆಮಾಚುತ್ತಿದ್ದಾರೆ’ ಎಂದು ದೂರಿದರು.

ಕೃತಕ ಅಭಾವ: ‘ಬಡಾವಣೆಗಳ ಕೊಳವೆ ಬಾವಿಗಳಲ್ಲಿ ನೀರು ಬತ್ತಿದೆ. ಮತ್ತೊಂದೆಡೆ ನಗರಸಭೆಯ ಟ್ಯಾಂಕರ್ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ದೂರು ನೀಡಲು ನಗರಸಭೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಅಧಿಕಾರಿಗಳೇ ನೀರಿನ ಕೃತಕ ಅಭಾವ ಸೃಷ್ಟಿಸಿದ್ದಾರೆ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘ನೀರು ಲಭ್ಯವಿರುವ ಕೊಳವೆ ಬಾವಿಗಳಿಗೆ ಹೊಸದಾಗಿ ಪಂಪ್‌, ಮೋಟರ್‌ ಅಳವಡಿಸಬೇಕು. ದುರಸ್ತಿ ಹಂತದಲ್ಲಿರುವ ಕೊಳವೆ ಬಾವಿಗಳನ್ನು ಶೀಘ್ರವೇ ರಿಪೇರಿ ಮಾಡಬೇಕು. ಹಿಂದಿನಂತೆಯೇ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕು’ ಎಂದು ಒತ್ತಾಯಿಸಿದರು.

ಬಡಾವಣೆ ನಿವಾಸಿಗಳಾದ ಎಂ ವೆಂಕಟೇಶ್, ಗೋಪಾಲಪ್ಪ, ವೆಂಕಟಾಚಲಪತಿ, ಸುದರ್ಶನ್ ಮೂರ್ತಿ, ಭಾರತಿ, ವಜೀರ್, ಆನಂದ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.