ADVERTISEMENT

ಕೆರೆ–ರಾಜಕಾಲುವೆ ಒತ್ತುವರಿ: ರೈತ ಸಂಘ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 12:40 IST
Last Updated 28 ಜುಲೈ 2021, 12:40 IST
ಕೆರೆ ಹಾಗೂ ರಾಜಕಾಲುವೆಗಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರ ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು
ಕೆರೆ ಹಾಗೂ ರಾಜಕಾಲುವೆಗಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರ ತಹಶೀಲ್ದಾರ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು   

ಕೋಲಾರ: ಕೆರೆ, ರಾಜಕಾಲುವೆಗಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಮಾಡಿದರು.

‘ರಿಯಲ್‌ ಎಸ್ಟೇಟ್‌ ಮಾಫಿಯಾ ಕೆರೆಗಳು, ಗುಂಡುತೋಪು ಹಾಗೂ ರಾಜಕಾಲುವೆಗಳನ್ನು ಒತ್ತುವರಿ ಮಾಡಿದೆ. ಕೆರೆಯಂಗಳ ಹಾಗೂ ರಾಜಕಾಲುವೆಗಳ ಜಾಗದಲ್ಲಿ ಅನಧಿಕೃತ ಲೇಔಟ್‌ಗಳು ತಲೆ ಎತ್ತಿವೆ. ಲಂಚದಾಸೆಗೆ ಅಧಿಕಾರಿಗಳೇ ಈ ಅಕ್ರಮಕ್ಕೆ ಕೈಜೋಡಿಸಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.

‘ಕೆರೆಗಳ ತವರು ಎಂದು ಹೆಸರಾಗಿರುವ ಕೋಲಾರ ಜಿಲ್ಲೆಯಲ್ಲಿ 2,800ಕ್ಕೂ ಹೆಚ್ಚು ಕೆರೆಗಳಿವೆ. ಈ ಹಿಂದೆ ಮಳೆಗಾಲದಲ್ಲಿ ಎಲ್ಲಾ ಕೆರೆಗಳು ತುಂಬುತ್ತಿದ್ದವು. ಆದರೆ, ಭೂಗಳ್ಳರ ಹಾವಳಿಯಿಂದ ಕೆರೆ, ರಾಜಕಾಲುವೆಗಳು ಕಣ್ಮರೆಯಾಗಿವೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಳವಳ ವ್ಯಕ್ತಪಡಿಸಿದರು.

ADVERTISEMENT

‘ನಕಲಿ ದಾಖಲೆಪತ್ರ ಸೃಷ್ಟಿಸಿ ಗ್ರಾಮೀಣ ಭಾಗದ ಸರ್ಕಾರಿ ಗೋಮಾಳ, ಗುಂಡು ತೋಪು, ಸ್ಮಶಾನ, ಕೆರೆ ಅಂಗಳ ಒತ್ತುವರಿ ಮಾಡಲಾಗಿದೆ. ಆದರೆ, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಸರ್ಕಾರಿ ಜಮೀನು ರಕ್ಷಿಸಬೇಕಾದ ಅಧಿಕಾರಿಗಳೇ ಭೂಗಳ್ಳರ ಜತೆ ಶಾಮೀಲಾಗಿದ್ದಾರೆ’ ಎಂದು ಕಿಡಿಕಾರಿದರು.

‘ಭೂರಹಿತ ಬಡವರಿಗೆ ಸರ್ಕಾರಿ ಜಮೀನಿಗೆ ಅರ್ಜಿ ಸಲ್ಲಿಸಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ, ಈ ಅರ್ಜಿದಾರರನ್ನು ಬಿಟ್ಟು ದರಖಾಸ್ತು ಸಮಿತಿ ಮೂಲಕ ಅಕ್ರಮವಾಗಿ ಬಲಾಢ್ಯರಿಗೆ ಸರ್ಕಾರಿ ಜಮೀನು ನೀಡಲಾಗಿದೆ. ನಕಲಿ ದಾಖಲೆಪತ್ರ ಸೃಷ್ಟಿಸಿ ಸಾಗುವಳಿ ಚೀಟಿ ನೀಡಿರುವವರ ವಿರುದ್ಧ ತನಿಖೆ ನಡೆಸಬೇಕು’ ಎಂದು ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳನಿಗೌಡ ಒತ್ತಾಯಿಸಿದರು.

ಸ್ವರೂಪವೇ ಬದಲು: ‘ಪೂರ್ವಿಕರು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ರಾಜಕಾಲುವೆಗಳ ಮೂಲಕ ನೀರಿನ ಸಂಪರ್ಕ ಕಲ್ಪಿಸಿದ್ದರು. ಈಗ ರಾಜಕಾಲುವೆಗಳು ಒತ್ತುವರಿ ಆಗಿರುವುದರಿಂದ ಮಳೆ ನೀರು ಕೆರೆಗಳಿಗೆ ಹರಿಯುತ್ತಿಲ್ಲ. ಮತ್ತೊಂದೆಡೆ ಒತ್ತುವರಿಯಿಂದ ಕೆರೆ ಹಾಗೂ ರಾಜಕಾಲುವೆಗಳ ಮೂಲ ಸ್ವರೂಪವೇ ಬದಲಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಸಣ್ಣಪುಟ್ಟ ಜಮೀನು ಒತ್ತುವರಿ ಮಾಡುವ ರೈತರ ಮೇಲೆ ಶಿಸ್ತುಕ್ರಮ ಜರುಗಿಸುವ ಅಧಿಕಾರಿಗಳು ಕೆರೆ, ರಾಜಕಾಲುವೆ ಒತ್ತುವರಿ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಅಧಿಕಾರಿಗಳು ನೆಪ ಮಾತ್ರಕ್ಕೆ ಕೆಲ ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸಿ ತೆರೆಮರೆಯಲ್ಲಿ ರಿಯಲ್‌ ಎಸ್ಟೇಟ್‌ ದಂಧೆಕೋರರ ಜತೆ ವ್ಯವಹಾರ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ಜಿಲ್ಲಾಧಿಕಾರಿಯು ಕೆರೆ, ರಾಜಕಾಲುವೆ ಹಾಗೂ ಸರ್ಕಾರಿ ಜಮೀನುಗಳ ರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕು. ಒತ್ತುವರಿದಾರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಒತ್ತುವರಿಗೆ ನೆರವು ನೀಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಈ ಹಿಂದೆ ತಹಶೀಲ್ದಾರ್‌ ಆಗಿದ್ದ ವಿಜಯಣ್ಣ ಅವರ ಅವಧಿಯಲ್ಲಿ ನೀಡಿರುವ ಸಾಗುವಳಿ ಚೀಟಿ ರದ್ದುಪಡಿಸಿ, ಅರ್ಹರಿಗೆ ಜಮೀನು ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ್, ಉಪಾಧ್ಯಕ್ಷ ಚಾಂದ್‌ಪಾಷಾ, ಸದಸ್ಯರಾದ ಮುನಿಯಪ್ಪ, ತಿಮ್ಮಣ್ಣ, ನಾಗೇಶ್, ವೆಂಕಟೇಶ್, ಯಲ್ಲಪ್ಪ, ಹರೀಶ್, ಸಂದೀಪ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.