ADVERTISEMENT

ಬಾಕಿ ವೇತನ ಪಾವತಿಗೆ ಒತ್ತಾಯ

ಗ್ರಾಮ ಪಂಚಾಯಿತಿ ಕಚೇರಿ ಎದುರು ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 13:59 IST
Last Updated 16 ಜೂನ್ 2021, 13:59 IST
ಬಾಕಿ ವೇತನ ಪಾವತಿಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾ.ಪಂ ಕಚೇರಿ ಎದುರು ಬುಧವಾರ ಧರಣಿ ನಡೆಸಿ ಮನವಿ ಸಲ್ಲಿಸಿದರು
ಬಾಕಿ ವೇತನ ಪಾವತಿಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾ.ಪಂ ಕಚೇರಿ ಎದುರು ಬುಧವಾರ ಧರಣಿ ನಡೆಸಿ ಮನವಿ ಸಲ್ಲಿಸಿದರು   

ಕೋಲಾರ: ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಬುಧವಾರ ಗ್ರಾ.ಪಂ ಕಚೇರಿಗಳು ಎದುರು ಧರಣಿ ನಡೆಸಿದರು.

‘ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯ ಬಹುಪಾಲು ಗ್ರಾ.ಪಂ ನೌಕರರಿಗೆ 2017ರಿಂದ ಸಂಬಳ ಕೊಟ್ಟಿಲ್ಲ. ಪಿಡಿಒಗಳು ನೌಕರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ದೇಶದೆಲ್ಲೆಡೆ ಕೋವಿಡ್‌ 2ನೇ ಅಲೆಯ ಭೀತಿ ಹೆಚ್ಚಿದೆ. ಕೋವಿಡ್‌ ಆತಂಕದ ನಡುವೆಯೂ ಗ್ರಾ.ಪಂ ನೌಕರರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆದರೆ, ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ನೀಡದ ಕಾರಣ ನೌಕರರು ಬಡ್ಡಿ ಸಾಲ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಎಂದು ಸಬೂಬು ಹೇಳುತ್ತಾರೆ’ ಎಂದು ಕಿಡಿಕಾರಿದರು.

ದುರ್ಬಳಕೆ: ‘ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರನ್ನು ವಂಚಿಸುತ್ತಿದ್ದಾರೆ. ಅಧಿಕಾರಿಗಳು ನೌಕರರ ವೇತನದ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು.

‘ಸರ್ಕಾರ 14ನೇ ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಸಂಬಳ ಕೊಡುವಂತೆ ಆದೇಶಿಸಿದೆ. ಪಿಡಿಒಗಳು ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿ ಮಾಡದೆ ಸಂಬಳ ಬಾಕಿ ಉಳಿಸಿಕೊಂಡಿದ್ದಾರೆ. ಸಂಬಳ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ’ ಎಂದು ಅಳಲು ತೋಡಿಕೊಂಡರು.

ಜೇಷ್ಠತಾ ಪಟ್ಟಿ: ‘ಗ್ರಾ.ಪಂ ಕರ ವಸೂಲಿ ಹಣದಲ್ಲಿ ಶೇ 40ರಷ್ಟನ್ನು ನೌಕರರ ಬಾಕಿ ವೇತನ ಪಾವತಿಗೆ ಬಳಸಬೇಕು. ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ, ಸಮವಸ್ತ್ರ, ನಿವೃತ್ತಿ ವೇತನ ನೀಡಬೇಕು. ನೌಕರರನ್ನು ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.