ADVERTISEMENT

ಬಾಕಿ ವೇತನ ಬಿಡುಗಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಮೇ 2021, 15:31 IST
Last Updated 4 ಮೇ 2021, 15:31 IST

ಕೋಲಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಬಾಕಿ ವೇತನ ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ನಮ್ಮ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್‌ಗೌಡ ಒತ್ತಾಯಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿನ ದಿನಗೂಲಿ ಮತ್ತು ಗುತ್ತಿಗೆ ಆಧಾರದ ಸಿಬ್ಬಂದಿಯು ಕೋವಿಡ್ ಆತಂಕದ ನಡುವೆಯೂ ಪ್ರಾಣ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಗುತ್ತಿಗೆ ಏಜೆನ್ಸಿಯವರು ಈ ಸಿಬ್ಬಂದಿಗೆ ವೇತನೆ ನೀಡದೆ ವಂಚಿಸುತ್ತಿದ್ದಾರೆ ಗಣೇಶ್‌ಗೌಡ ಪತ್ರಿಕಾ ಪ್ರಕಟಣೆಯಲ್ಲಿ ದೂರಿದ್ದಾರೆ.

ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಶೂಶ್ರುಷಕಿಯರು, ಡಿ ಗ್ರೂಪ್ ನೌಕರರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಏಳೆಂಟು ತಿಂಗಳಿಂದ ವೇತನ ಕೊಟ್ಟಿಲ್ಲ. ವೇತನ ಪಾವತಿಗಾಗಿ ಸರ್ಕಾರದಿಂದ ಬಿಡುಗಡೆಯಾದ ಹಣವನ್ನು ಗುತ್ತಿಗೆ ಏಜೆನ್ಸಿಯವರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ADVERTISEMENT

ಕೋವಿಡ್‌ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ದಿನಗೂಲಿ ಮತ್ತು ಗುತ್ತಿಗೆ ಆಧಾರದ ಸಿಬ್ಬಂದಿಗೆ ವೇತನವಿಲ್ಲದ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಸಾಕಷ್ಟು ಸಿಬ್ಬಂದಿ ಬಡ್ಡಿ ಸಾಲ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಗುತ್ತಿಗೆ ಏಜೆನ್ಸಿಯವರಿಗೆ ಈ ಸಿಬ್ಬಂದಿಯ ಕಷ್ಟದ ಅರಿವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೇತನ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ಸಾಕಷ್ಟು ಸಿಬ್ಬಂದಿ ಕೆಲಸ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಸಿಬ್ಬಂದಿ ಕೆಲಸ ಬಿಟ್ಟರೆ ಕೋವಿಡ್‌ ನಿರ್ವಹಣೆಗೆ ಸಮಸ್ಯೆಯಾಗುತ್ತದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಂಗತಿ ಅರಿತು ಏಜೆನ್ಸಿಗಳ ಮೇಲೆ ಒತ್ತಡ ತಂದು ಸಿಬ್ಬಂದಿಗೆ ಶೀಘ್ರವೇ ಬಾಕಿ ವೇತನ ಬಿಡುಗಡೆ ಮಾಡಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.