ADVERTISEMENT

ಬಾಕಿ ವೇತನ ಬಿಡುಗಡೆಗೆ ಒತ್ತಾಯ

ತಾ.ಪಂ ಎದುರು ಗ್ರಾಮ ಪಂಚಾಯಿತಿ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 13:06 IST
Last Updated 12 ಜುಲೈ 2020, 13:06 IST
ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಹಾಗೂ ಸಿಐಟಿಯು ಸದಸ್ಯರು ಕೋಲಾರದಲ್ಲಿ ಶನಿವಾರ ತಾಲ್ಲೂಕು ಪಂಚಾಯಿತಿ ಎದುರು ಧರಣಿ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಹಾಗೂ ಸಿಐಟಿಯು ಸದಸ್ಯರು ಕೋಲಾರದಲ್ಲಿ ಶನಿವಾರ ತಾಲ್ಲೂಕು ಪಂಚಾಯಿತಿ ಎದುರು ಧರಣಿ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.   

ಕೋಲಾರ: ಗ್ರಾಮ ಪಂಚಾಯಿತಿ ನೌಕರರ ಬಾಕಿ ವೇತನ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಹಾಗೂ ಸಿಐಟಿಯು ಸದಸ್ಯರು ಇಲ್ಲಿ ಶನಿವಾರ ತಾಲ್ಲೂಕು ಪಂಚಾಯಿತಿ ಎದುರು ಧರಣಿ ನಡೆಸಿದರು.

‘ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ತಾಲ್ಲೂಕಿನ ಬಹುತೇಕ ಗ್ರಾ.ಪಂ ನೌಕರರಿಗೆ ಏಳೆಂಟು ತಿಂಗಳಿಂದ ಸಂಬಳ ಕೊಟ್ಟಿಲ್ಲ. ಪಿಡಿಒಗಳು ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಸಿಐಟಿಯು ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ದೂರಿದರು.

ADVERTISEMENT

‘ವೇತನ ನೀಡದ ಕಾರಣ ನೌಕರರು ಬಡ್ಡಿ ಸಾಲ ಮಾಡಿ ಜೀವನ ಸಾಗಿಸುವಂತಾಗಿದೆ. ಆದರೆ, ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಮತ್ತು ಪಂಚಾಯಿತಿಗೆ ಆದಾಯ ಬರುತ್ತಿಲ್ಲ ಎಂದು ಸಬೂಬು ಹೇಳುತ್ತಾರೆ’ ಎಂದು ಕಿಡಿಕಾರಿದರು.

ವೇತನ ದುರ್ಬಳಕೆ: ‘ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರಿಗೆ ವಂಚಿಸುತ್ತಿದ್ದಾರೆ. ಅಧಿಕಾರಿಗಳು ನೌಕರರ ವೇತನದ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ಕೋಲಾರ ತಾಲ್ಲೂಕಿನ 20ಕ್ಕೂ ಹೆಚ್ಚು ಗ್ರಾ.ಪಂ ನೌಕರರು ನಿವೃತ್ತಿ ಹೊಂದಿದ್ದು, ಅವರಿಗೆ ಸರ್ಕಾರದ ನಿಯಮದಂತೆ ಸಿಗಬೇಕಾದ ಗ್ರಾಚ್ಯೂಟಿ ನೀಡಿಲ್ಲ. ಈ ಸಂಬಂಧ ಹಲವು ಬಾರಿ ಹೋರಾಟ ನಡೆಸಿದರೂ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಗ್ರಾ.ಪಂ ನೌಕರರನ್ನು ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ವಿಮೆ ಸೌಲಭ್ಯ ಕಲ್ಪಿಸಬೇಕು. ಗ್ರಾ.ಪಂ ನೌಕರರ ಕೆಲಸ ಪುನರ್ ವಿಮರ್ಶೆ ಸಮಿತಿ ರಚನೆ ಮಾಡಬಾರದು’ ಎಂದು ಒತ್ತಾಯಿಸಿದರು.

ಗ್ರಾ.ಪಂ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟರಾಮೇಗೌಡ, ಪದಾಧಿಕಾರಿಗಳಾದ ರಾಮಚಂದ್ರಪ್ಪ, ಅಶೋಕ, ಸೀನಪ್ಪ, ಕೃಷ್ಣಪ್ಪ, ಮುನಿನಾರಾಯಣಪ್ಪ, ರಮೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.