ಕೋಲಾರ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನೌಕರರಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಇಲ್ಲಿ ಜಿಲ್ಲಾ ಪಂಚಾಯಿತಿ ಎದುರು ಮಂಗಳವಾರ ಧರಣಿ ನಡೆಸಿದರು.
‘ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.
‘ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಾರುತಿ ಮಾನ್ಪಡೆ ದೂರಿದರು.
‘ಗ್ರಾ.ಪಂ ನೌಕರರಿಗೆ ಹಲವು ತಿಂಗಳಿಂದ ವೇತನ ಕೊಟ್ಟಿಲ್ಲ. ಹೀಗಾಗಿ ನೌಕರರು ಬಡ್ಡಿ ಸಾಲ ಮಾಡಿ ಜೀವನ ಸಾಗಿಸುವಂತಾಗಿದೆ. ಆದರೆ, ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಮತ್ತು ಪಂಚಾಯಿತಿಗೆ ಆದಾಯ ಬರುತ್ತಿಲ್ಲ ಎಂದು ಸಬೂಬು ಹೇಳುತ್ತಾರೆ’ ಎಂದು ಕಿಡಿಕಾರಿದರು.
ವೇತನ ದುರ್ಬಳಕೆ: ‘ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರಿಗೆ ವಂಚಿಸುತ್ತಿದ್ದಾರೆ. ಅಧಿಕಾರಿಗಳು ನೌಕರರ ವೇತನದ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.
‘ಕರ ಸಂಗ್ರಹಗಾರ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕನಿಷ್ಠ ವೇತನ ₹ 10,500 ಪಾವತಿಸಬೇಕು’ ಎಂದು ಒತ್ತಾಯಿಸಿದರು.
‘ಸರ್ಕಾರದ ಆದೇಶದಂತೆ 14ನೇ ಹಣಕಾಸು ಯೋಜನೆ ನಿಧಿಯಲ್ಲಿ ಶೇ 10ರಷ್ಟು ಮತ್ತು ಸ್ಥಳೀಯ ತೆರಿಗೆ ಸಂಗ್ರಹದಲ್ಲಿ ಶೇ 40ರಷ್ಟು ಹಣವನ್ನು ಸಿಬ್ಬಂದಿ ವೇತನಕ್ಕೆ ಮೀಸಲಿಡಬೇಕು. ನಿವೃತ್ತಿ ನೌಕರರಿಗೆ ಸೇವಾ ಪುಸ್ತಕ ತೆರೆಯಬೇಕು. ಸೇವಾ ನಿಯಮಾವಳಿ ರಚಿಸಬೇಕು’ ಎಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಅಧ್ಯಕ್ಷ ಅಮರನಾರಾಯಣ, ಕಾರ್ಯದರ್ಶಿ ಎಂ.ಸಿ.ಯಲ್ಲಪ್ಪ, ಸಂಘಟನಾ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಖಜಾಂಚಿ ಕೇಶವರಾವ್, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಅಶ್ವತ್ಥಪ್ಪ, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ರಾಜೇಂದ್ರ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.