ADVERTISEMENT

ಐ.ಟಿ ದಾಳಿ: ಪ್ರವೇಶಾತಿ ದಾಖಲೆಪತ್ರ ವಶ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 12:51 IST
Last Updated 11 ಅಕ್ಟೋಬರ್ 2019, 12:51 IST
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಕೋಲಾರದಲ್ಲಿನ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪರ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಕೋಲಾರದಲ್ಲಿನ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪರ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.   

ಕೋಲಾರ: ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಒಡೆತನದ ವೈದ್ಯಕೀಯ ಕಾಲೇಜು, ಶಿಕ್ಷಣ ಸಂಸ್ಥೆ ಹಾಗೂ ಅತಿಥಿಗೃಹದ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರವೂ ಪರಿಶೀಲನೆ ಮುಂದುವರಿಸಿದರು.

ದೇವರಾಜ ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯ ಕುಲಪತಿ, ಹಣಕಾಸು ಹಾಗೂ ಆಡಳಿತ ವಿಭಾಗದ ಸಿಬ್ಬಂದಿ ಸೇರಿದಂತೆ ಹಲವರ ವಿಚಾರಣೆ ನಡೆಸಿದ ಐ.ಟಿ ಅಧಿಕಾರಿಗಳು ಹಣಕಾಸು ವ್ಯವಹಾರ, ಆದಾಯ ತೆರಿಗೆ ಪಾವತಿ ಸಂಬಂಧ ಮಹತ್ವದ ದಾಖಲೆಪತ್ರ ಸಂಗ್ರಹಿಸಿದರು.

ವೈದ್ಯಕೀಯ ಸೀಟು ಹಂಚಿಕೆ, ದಾಖಲಾತಿ, ಪ್ರವೇಶ ಶುಲ್ಕ ಪಾವತಿಗೆ ಸಂಬಂಧಿಸಿದ ಕಡತಗಳನ್ನು ಅಧಿಕಾರಿಗಳು ಜಾಲಾಡಿದರು. ಸರ್ಕಾರಿ ಕೋಟಾದ ವೈದ್ಯಕೀಯ ಸೀಟುಗಳನ್ನು ಮ್ಯಾನೇಜ್‌ಮೆಂಟ್‌ ಕೋಟಾದ ಸೀಟುಗಳಾಗಿ ಪರಿವರ್ತಿಸಿ ಹೊರ ರಾಜ್ಯದ ವಿದ್ಯಾರ್ಥಿಗಳಿಂದ ಕೋಟ್ಯಂತರ ರೂಪಾಯಿ ವಂತಿಗೆ ಪಡೆದು ಪ್ರವೇಶಾತಿ ನೀಡಿರುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು.

ADVERTISEMENT

ಗುರುವಾರ ತಡರಾತ್ರಿವರೆಗೆ ಪರಿಶೀಲನೆ ನಡೆಸಿದ್ದ ಐ.ಟಿ ಅಧಿಕಾರಿಗಳು ರಾತ್ರಿ ಜಾಲಪ್ಪರ ಅತಿಥಿಗೃಹದಲ್ಲೇ ತಂಗಿದ್ದರು. ಐ.ಟಿ ದಾಳಿಯ ಒತ್ತಡದ ನಡುವೆಯೂ ಜಾಲಪ್ಪ ಅವರು ಶುಕ್ರವಾರ ಬೆಳಿಗ್ಗೆ ತಮ್ಮ ಶಿಕ್ಷಣ ಸಂಸ್ಥೆ ಆವರಣದಲ್ಲಿನ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.