ADVERTISEMENT

ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲ್ಲ: ಶಾಸಕ ಕೊತ್ತೂರು ಮಂಜುನಾಥ್

ಬಿಜೆಪಿ ಅಧಿಕಾರಕ್ಕೆ ಬಂದರೂ ಅಭಿವೃದ್ಧಿ ಮಾಡಲ್ಲ: ಶಾಸಕ ಟೀಕಾ ಪ್ರಹಾರ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 6:01 IST
Last Updated 22 ಜುಲೈ 2025, 6:01 IST
ಕೋಲಾರ ತಾಲ್ಲೂಕಿನ ವೇಮಗಲ್‌ನಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್‌ ಮಾತನಾಡಿದರು
ಕೋಲಾರ ತಾಲ್ಲೂಕಿನ ವೇಮಗಲ್‌ನಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್‌ ಮಾತನಾಡಿದರು    

ಕೋಲಾರ: ‘ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಯಾವತ್ತಿಗೂ ಅಧಿಕಾರಕ್ಕೆ ಬರಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಲ್ಲ’ ಎಂದು ಶಾಸಕ ಕೊತ್ತೂರು ಮಂಜುನಾಥ್ ಟೀಕಾ ಪ್ರಹಾರ ನಡೆಸಿದರು.

ತಾಲ್ಲೂಕಿನ ವೇಮಗಲ್– ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧಿಸಿದಂತೆ ಸೋಮವಾರ ವಾರ್ಡ್‌ವಾರು ಸಭೆಗಳಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಅಧಿಕಾರ ನಡೆಸಿವೆ. ಅವರನ್ನು ಪ್ರಶ್ನೆ ಮಾಡಿ ಕೇಳಿ ಅವರ ಕೊಡುಗೆ ಏನು ಎಂದು? ಅದೇ ರೀತಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಏನು ಕೊಟ್ಟಿದೆ ಎಂಬುದನ್ನು ಜನರು ಮತ್ತು ವಿರೋಧ ಪಕ್ಷಗಳ ಬಳಿ ಕೇಳಿ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ ಸಾಧ್ಯ’ ಎಂದರು.

‘ರಾಜ್ಯದಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳು ಇಲ್ಲದೇ ನೇರವಾಗಿ ಪಲಾನುಭವಿಗಳಿಗೆ ನೀಡಲಾಗುತ್ತಿದೆ. ಕಷ್ಟಕ್ಕೆ ಆದವರನ್ನು ನೆನಪಿಸಿಕೊಳ್ಳಬೇಕು. ಯಾವುದೇ ಜಾತಿ ಧರ್ಮವಿಲ್ಲದೇ ಸೌಲಭ್ಯ ವಿತರಿಸಲಾಗುತ್ತಿದೆ. ಹಸಿವು ಮುಕ್ತ ಕರ್ನಾಟಕ ಮುಖ್ಯ ಗುರಿ ನಮ್ಮ ಸರ್ಕಾರದ್ದು’ ಎಂದು ಹೇಳಿದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್‌, ‘ಈ ಭಾಗದಲ್ಲಿ ಕೈಗಾರಿಕೆಗಳು ಬರಲು, ಪಟ್ಟಣ ಪಂಚಾಯಿತಿಯಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ. ಸುಮಾರು 9ವರ್ಷಗಳ ನಂತರ ಚುನಾವಣೆ ನಡೆಯುತ್ತಿದೆ. ವಾರ್ಡ್‌ಗಳಲ್ಲಿಯೇ ಜನಾಭಿಪ್ರಾಯ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ’ ಎಂದರು.

ವೇಮಗಲ್ ಹೋಬಳಿ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ತಾಲ್ಲೂಕು ಕೇಂದ್ರವನ್ನಾಗಿ ಮಾಡಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಹೇಳಿದರು. .

ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ‘ಕುರಗಲ್ ಸರ್ಕಾರಿ ಶಾಲೆ ಮುಚ್ಚಿ ಹೋಗುವಂತಿತ್ತು. ಅಂತಹ ಸರ್ಕಾರಿ ಶಾಲೆಯನ್ನು ಕುರುಗಲ್ ಗ್ರಾಮದ ಕೆ.ಎಂ.ಚೌಡೇಗೌಡ ಉಳಿಸಿ ಅಭಿವೃದ್ಧಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಎಸ್.ಎಂ.ಕೃಷ್ಣ ಕಾಲದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಪ್ರೌಢಶಾಲೆಯನ್ನು ಗುರುತಿಸಿದ್ದರು’ ಎಂದರು.

ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಶಂಕರ್, ಮುಖಂಡರಾದ ಉರಟ ಅಗ್ರಹಾರ ಚೌಡರೆಡ್ಡಿ, ನಾಗನಾಳ ಸೋಮಣ್ಣ, ಮೈಲಾಂಡಹಳ್ಳಿ ಮುರಳಿ, ಕೆ.ಎಂ.ಚೌಡೇಗೌಡ, ರಮೇಶ್, ಕಡಗಟ್ಟೂರು ದೇವರಾಜ್, ಬೈರಂಡಹಳ್ಳಿ ನಾಗೇಶ್, ಅಫ್ಸರ್, ಪೇರ್ಜೆನಹಳ್ಳಿ ನಾಗೇಶ್, ಬೆಟ್ಟಹೊಸಪುರ ಜಗನ್, ಯಲವಾರ ರಾಜಕುಮಾರ್, ಬರ್ಕತ್ತುಲ್ಲಾಖಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.