ಬಂಗಾರಪೇಟೆ: ‘ಜನರು ಸರ್ಕಾರಿ ಕಚೇರಿ ಗಳಿಗೆ ವಿನಾಕಾರಣ ಅಲೆಯುವುದನ್ನು ತಪ್ಪಿಸಿ ಒಂದೇ ಸೂರಿನಡಿ ಎಲ್ಲಾ ಕೆಲಸಗಳನ್ನು ಮಾಡಿಕೊಡುವ ಸಲುವಾಗಿ ಕಂದಾಯ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಉಪ ವಿಭಾಗಾಧಿಕಾರಿ ವಿ. ಸೋಮಶೇಖರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಪಿಂಚಣಿ ಹಾಗೂ ಕಂದಾಯ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅದಾಲತ್ ಜಾರಿಯಾದ ಬಳಿಕ ರೈತರ ಬಹುತೇಕ ಸಮಸ್ಯೆಗಳು ಬಗೆಹರಿದಿವೆ. ಕೋವಿಡ್-19 ಪರಿಣಾಮ ಏಳು ತಿಂಗಳಿಂದ ಕಂದಾಯ ಅದಾಲತ್ ಹಮ್ಮಿಕೊಳ್ಳಲು ಆಗಿರಲಿಲ್ಲ ಎಂದರು.
ಕೇವಲ ಅರ್ಜಿ ಸ್ವೀಕರಿಸಿದರೆ ಜನರಿಗೆ ಇಲಾಖೆಯ ಮೇಲೆ ನಂಬಿಕೆ ಬರುವುದಿಲ್ಲ. ಕಾಲಮಿತಿಯಲ್ಲಿ ಇತ್ಯರ್ಥ ಮಾಡಿದರೆ ಮಾತ್ರ ಉದ್ದೇಶ ಈಡೇರಲಿದೆ. ಪೌತಿ ವಾರಾಸ, ಪೋಡಿ, ಖಾತೆ ಬದಲಾವಣೆ, ಪಹಣಿಯಲ್ಲಿ ತಿದ್ದುಪಡಿಗೆ ಸಂಬಂಧಿಸಿದಂತೆ 170 ಅರ್ಜಿ ಸಲ್ಲಿಕೆಯಾಗಿವೆ. ಕಾಲಮಿತಿಯಲ್ಲಿ ಬಗೆಹರಿಸಲಾಗುವುದು ಎಂದರು.
ತಹಶೀಲ್ದಾರ್ ದಯಾನಂದ್ ಮಾತನಾಡಿದರು. ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ 120 ಫಲಾನುಭವಿಗಳಿಗೆ ಸ್ಥಳದಲ್ಲೇ ಮಂಜೂರಾತಿ ಪತ್ರ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಸರಸ್ವತಿ, ಅಪ್ಪಯ್ಯಗೌಡ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.