ADVERTISEMENT

ಜಿಲ್ಲಾ ಕೇಂದ್ರದಲ್ಲಿ ಕೆ.ಸಿ.ರೆಡ್ಡಿ ಪುತ್ಥಳಿ

ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 15:24 IST
Last Updated 14 ನವೆಂಬರ್ 2020, 15:24 IST
ಕೋಲಾರದಲ್ಲಿ ಶನಿವಾರ ಆರಂಭವಾದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿದರು.
ಕೋಲಾರದಲ್ಲಿ ಶನಿವಾರ ಆರಂಭವಾದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿದರು.   

ಕೋಲಾರ: ‘ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿ ಸಹಕಾರ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ದಿವಂಗತ ಕೆ.ಸಿ.ರೆಡ್ಡಿ ಅವರ ಪುತ್ಥಳಿಯನ್ನು ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.

ಇಲ್ಲಿ ಶನಿವಾರ ಆರಂಭವಾದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ಜಿಲ್ಲೆಯವರಾದ ಕೆ.ಸಿ.ರೆಡ್ಡಿ ಅವರ ನೆನಪಿನಲ್ಲಿ ಜಿಲ್ಲೆಯಲ್ಲಿ ಏನನ್ನೂ ಮಾಡಿಲ್ಲ. ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಿ ಅದರ ಅಧ್ಯಕ್ಷರಾಗುವ ಮೂಲಕ ರೈತರಿಗೆ ಅನುಕೂಲ ಮಾಡಿದ್ದಾರೆ’ ಎಂದು ಸ್ಮರಿಸಿದರು.

‘ರೆಡ್ಡಿ ಅವರ ನೆನಪಿಗಾಗಿ ಪುತ್ಥಳಿ ನಿರ್ಮಿಸಲು ನಿರ್ಧರಿಸಿದ್ದು, ಜಿಲ್ಲೆಯ ಎಲ್ಲಾ ಸಹಕಾರಿಗಳು ಹಾಗೂ ಸಹಕಾರ ಸಂಸ್ಥೆಗಳು ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಮತ್ತಷ್ಟು ಪ್ರಗತಿ ಸಾಧಿಸಲು ಯುವಕರು ಮುಂದಾಳತ್ವ ವಹಿಸಬೇಕು. ನಂಬಿಕೆ, ವಿಶ್ವಾಸ, ಪಾರದರ್ಶಕ ವ್ಯವಹಾರದ ಮೂಲಕ ಸಹಕಾರ ರಂಗವನ್ನು ಬಲಪಡಿಸಬೇಕು’ ಎಂದು ಕಿವಿಮಾತು ಹೇಳಿದರು.

ADVERTISEMENT

‘ನಷ್ಟದಿಂದ ಮುಚ್ಚುವ ಹಂತ ತಲುಪಿದ್ದ ಡಿಸಿಸಿ ಬ್ಯಾಂಕ್‌ಗೆ ಗೋವಿಂದಗೌಡರ ನೇತೃತ್ವದ ಆಡಳಿತ ಮಂಡಳಿ ಜೀವ ತುಂಬಿದೆ. ಗೋವಿಂದಗೌಡರು ಬ್ಯಾಂಕ್‌ನ ಅಧ್ಯಕ್ಷರಾದರೆ ನಿಭಾಯಿಸುವುದು ಕಷ್ಟವಾಗಬಹುದೆಂದು ಅಧ್ಯಕ್ಷ ಸ್ಥಾನಕ್ಕೆ ಬೇರೆಯವರ ಹೆಸರು ಸೂಚಿಸಿದ್ದೆ. ಆದರೆ, ಗೋವಿಂದಗೌಡರು ನನ್ನ ನಿರೀಕ್ಷೆಗೂ ಮೀರಿ ಬ್ಯಾಂಕ್‌ ಅಭಿವೃದ್ಧಿಪಡಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಲಿಷ್ಠವಾಗಿದೆ: ‘ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಬಲಿಷ್ಠವಾಗಿದೆ ಎಂಬುದಕ್ಕೆ ಕೋಚಿಮುಲ್ ಹಾಗೂ ಡಿಸಿಸಿ ಬ್ಯಾಂಕ್ ಸಾಧನೆಯೇ ಸಾಕ್ಷಿ. ಡಿಸಿಸಿ ಬ್ಯಾಂಕ್ 7 ವರ್ಷಗಳಲ್ಲಿ ಅವಿಭಜಿತ ಕೋಲಾರ ಜಿಲ್ಲೆಯ 36 ಸಾವಿರಕ್ಕೂ ಹೆಚ್ಚು ಸ್ತ್ರೀಶಕ್ತಿ ಸಂಘಗಳಿಗೆ, 1,823 ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಗೂ ರೈತರಿಗೆ ಬಡ್ಡಿರಹಿತ ಸಾಲ ನೀಡುವ ಮೂಲಕ ರಾಜ್ಯದ ಗಮನ ಸೆಳೆದಿದೆ’ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

‘ಕೋಚಿಮುಲ್‌ ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಒಕ್ಕೂಟಕ್ಕೆ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಸರಬರಾಜಾಗುತ್ತಿದೆ. ಕೋಲಾರದಲ್ಲಿ ₹ 200 ಕೋಟಿ ವೆಚ್ಚದಲ್ಲಿ ಎಂ.ವಿ.ಕೃಷ್ಣಪ್ಪ ಮೆಗಾ ಡೇರಿ ಸ್ಥಾಪನೆ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

ಪ್ರಾತಿನಿಧ್ಯ ಚರ್ಚೆ: ‘ಸಹಕಾರ ಸಂಸ್ಥೆಗಳ ಸದಸ್ಯತ್ವ ಹೆಚ್ಚಿಸುವ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯದವರು ಆಡಳಿತ ಮಂಡಳಿಯಲ್ಲಿ ಪ್ರಾತಿನಿಧ್ಯ ಪಡೆಯಬೇಕು. ಈ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಜತೆ ಚರ್ಚಿಸಿದ್ದೇವೆ’ ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎಂ.ಎಲ್‌.ಅನಿಲ್‌ಕುಮಾರ್‌ ವಿವರಿಸಿದರು.

ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್‌, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮಣ್ಣ, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಎಸ್.ವಿ.ಗೋವರ್ಧನರೆಡ್ಡಿ, ನಿರ್ದೇಶಕರಾದ ಇ.ಗೋಪಾಲಪ್ಪ, ಎಸ್.ಆರ್.ರುದ್ರಸ್ವಾಮಿ, ಎನ್.ಶಂಕರನಾರಾಯಣಗೌಡ, ಅರುಣಮ್ಮ, ಡಿ.ಆರ್.ರಾಮಚಂದ್ರೇಗೌಡ, ಎಸ್.ಸುರೇಶ್, ಪಿ.ಎಂ.ವೆಂಕಟೇಶ್, ಎನ್.ನಾಗರಾಜ್, ಕೆ.ಎಂ.ಮಂಜುನಾಥ್, ಬಿ.ರಮೇಶ್, ಟಿ.ಕೆ.ಬೈರೇಗೌಡ, ವಿ.ಪಾಪಣ್ಣ, ಸಿಇಒ ಕೆ.ಎಂ.ಭಾರತಿ, ಕೋಲಾರ ಎಪಿಎಂಸಿ ಅಧ್ಯಕ್ಷ ಮಂಜುನಾಥ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.