ಕೋಲಾರ: ‘ಕೆ.ಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಗೆ ಹೆಚ್ಚುವರಿಯಾಗಿ 40 ಎಂಎಲ್ಡಿ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಕೆ.ಸಿ ವ್ಯಾಲಿ ಯೋಜನೆಯ ನೀರು ಹರಿವಿನ ಪ್ರಮಾಣದ ಸಂಬಂಧ ಬೆಂಗಳೂರಿನಲ್ಲಿ ಸೋಮವಾರ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದರು.
‘ಯೋಜನೆಯಿಂದ ಈ ಹಿಂದೆ ಜಿಲ್ಲೆಗೆ 250 ಎಂಎಲ್ಡಿ ನೀರು ಪಂಪ್ ಮಾಡಲಾಗುತ್ತಿತ್ತು. ಇದೀಗ 290 ಎಂಎಲ್ಡಿ ನೀರು ಪಂಪ್ ಮಾಡಲಾಗುತ್ತಿದೆ. ಹೆಚ್ಚುವರಿಯಾಗಿ ಪಂಪ್ ಮಾಡುತ್ತಿರುವ ನೀರಿನಲ್ಲಿ 10 ಎಂಎಲ್ಡಿ ನೀರನ್ನು ಹೊಸಕೋಟೆ ವ್ಯಾಪ್ತಿಯ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುತ್ತದೆ. ಈ ಎರಡೂ ಮಾರ್ಗಗಳಿಗೆ ನೀರು ಸರಬರಾಜು ಆರಂಭವಾಗಿದ್ದು, ಮುಖ್ಯ ಮಾರ್ಗದಲ್ಲಿ (ನರಸಾಪುರ, ಎಸ್.ಅಗ್ರಹಾರ, ಜನಘಟ್ಟ, ಬಂಗಾರಪೇಟೆ) 10 ಎಂಎಲ್ಡಿ ಹೆಚ್ಚುವರಿ ನೀರು ಹರಿಸಲಾಗುತ್ತಿದೆ’ ಎಂದು ಹೇಳಿದರು.
‘ಬಿಡಬ್ಲ್ಯೂಎಸ್ಎಸ್ಬಿ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಿನ 10 ದಿನದಲ್ಲಿ ಇನ್ನೂ ಹೆಚ್ಚುವರಿಯಾಗಿ 40 ಎಂಎಲ್ಡಿ ನೀರನ್ನು ಬೆಂಗಳೂರಿನಿಂದ ಜಿಲ್ಲೆಗೆ ಪಂಪ್ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಮುಖ್ಯ ಮಾರ್ಗದಲ್ಲಿ ಹರಿಯುವ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಲಿದೆ. ಮಾಲೂರು ಮಾರ್ಗದ ಬಳಕೆಗೂ 10 ದಿನದ ನಂತರ ಹೆಚ್ಚಿನ ನೀರನ್ನು ಹರಿಸಲಾಗುತ್ತದೆ’ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.