
ಕೆಜಿಎಫ್: ರಾಬರ್ಟಸನ್ ಪೇಟೆಯಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾ ಮಟ್ಟದ ಆಸ್ಪತ್ರೆಯನ್ನಾಗಿ ಅಧಿಕೃತವಾಗಿ ಘೋಷಿಸಲು ಆರೋಗ್ಯ ಇಲಾಖೆ ಆಯುಕ್ತರಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಶ್ರೀನಿವಾಸ್ ಹೇಳಿದರು.
ನಗರದ ಆಸ್ಪತ್ರೆಯನ್ನು ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನಾಗಿ ಘೋಷಣೆ ಮಾಡಲು ಅವರು ಹೊರಡಿಸಿದ್ದ ಸೂಚನೆ ವಿರುದ್ಧ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ, ಮಂಗಳವಾರ ನಗರದ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿ ನಡೆಸಿದರು. ಯಾವುದೇ ಕಾರಣಕ್ಕೂ ಈಗ ಇರುವ ಸ್ಥಾನಮಾನಗಳು ಕೆಳಗಿಳಿಯದಂತೆ ನೋಡಿಕೊಳ್ಳಲಾಗುವುದು. ಹಳೆಯ ಆದೇಶವನ್ನು ನೋಡಿ, ನೀಡಿದ್ದ ಸುತ್ತೋಲೆ ಈಗ ಗೊಂದಲ ಸೃಷ್ಟಿಸಿದೆ. ರಾಬರ್ಟಸನ್ಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎಲ್ಲಾ ರೀತಿಯಲ್ಲಿಯೂ ಜಿಲ್ಲಾ ಆಸ್ಪತ್ರೆಯಾಗುವ ಲಕ್ಷಣಗಳನ್ನು ಹೊಂದಿದೆ. ಅದು ಮುಂದುವರೆಯಲಿದೆ ಎಂದು ಹೇಳಿದರು.
ಆಸ್ಪತ್ರೆಯ ಸ್ಥಾನಮಾನ ಕಡಿಮೆ ಮಾಡಿ ಕೆಳದರ್ಜೆಗೆ ಇಳಿಸಲಾಗುವುದು ಎಂಬ ಶಂಕೆ ಬೇಡ. ಅಚಾತುರ್ಯದಲ್ಲಿ ನಡೆದ ಪತ್ರ ವ್ಯವಹಾರ ಗೊಂದಲ ಸೃಷ್ಟಿಸಿದೆ. ಆರೋಗ್ಯ ಸಚಿವರು ನಗರಕ್ಕೆ ಬಂದ ಸಂದರ್ಭದಲ್ಲಿ ಅವರು ಕೂಡ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸೂಚನೆ ನೀಡಿದ್ದರು. ಸಚಿವರ ಸೂಚನೆಯನ್ನು ಇದುವರೆವಿಗೂ ಜಾರಿಗೆ ಮಾಡಿಲ್ಲ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು. ಜಿಲ್ಲಾ ಶಸ್ತ್ರ ಚಿಕಿತ್ಸಕ ಹುದ್ದೆ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತದೆ ಎಂದು ಸ್ಪಷ್ಟೀಕರಣ ನೀಡಿದರು.
ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಂತೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಎಬಿಆರ್ಕೆ ನಿಧಿಯಲ್ಲಿ ಲಕ್ಷಾಂತರ ರೂಪಾಯಿ ಇದೆ. ಅದು ಆಸ್ಪತ್ರೆಯ ಮುಖ್ಯಸ್ಥರ ಸುಪರ್ದಿಯಲ್ಲಿ ಇರುತ್ತದೆ. ಆಸ್ಪತ್ರೆಯಲ್ಲಿ ದಾಸ್ತಾನು ಇಲ್ಲದ ಔಷಧಿಗಳನ್ನು ಆಸ್ಪತ್ರೆಗಳ ಮುಖ್ಯಸ್ಥರು ಖರೀದಿ ಮಾಡುವುದಕ್ಕೆ ಯಾವುದೇ ಆಕ್ಷೇಪ ಇಲ್ಲ. ಅದಕ್ಕಾಗಿ ಹಿರಿಯ ಅಧಿಕಾರಿಗಳಿಂದ ಅನುಮತಿ ಪಡೆಯುವ ಅವಶ್ಯಕತೆ ಕೂಡ ಇಲ್ಲ. ಸಾರ್ವಜನಿಕರಿಗೆ ಔಷಧಿ ಇಲ್ಲ ಎಂದು ಹೇಳುವ ಹಾಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೋಲಾರ ಜಿಲ್ಲೆಗೆ 20 ಆಂಬುಲೆನ್ಸ್ಗಳು ಮಂಜೂರಾಗಿವೆ. ಬೇತಮಂಗಲ ಮತ್ತು ಕ್ಯಾಸಂಬಳ್ಳಿ ಆಸ್ಪತ್ರೆಗಳಲ್ಲಿ ಈಗಾಗಲೇ ಆಂಬುಲೆನ್ಸ್ ಇದೆ. ರಾಬರ್ಟಸನ್ಪೇಟೆಯ ಆಸ್ಪತ್ರೆಯ ಆಂಬುಲೆನ್ಸ್ಗೆ ಚಾಲಕರ ಕೊರತೆ ಇದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಗುತ್ತಿಗೆ ಆಧಾರದ ಮೇಲೆ ಚಾಲಕನನ್ನು ನೇಮಕ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ ನೀಡುವ ಸಂಬಳದಲ್ಲಿ ಒಂದು ಸಾವಿರ ರೂಪಾಯಿ ಹಿಡಿಯಲಾಗುತ್ತಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು. ಬೇತಮಂಗಲ ಬಳಿಯ ಗುಟ್ಟಹಳ್ಳಿಯಲ್ಲಿ ಮಗು ಸಾವಿಗೆ ಆಸ್ಪತ್ರೆಯ ಸಿಬ್ಬಂದಿ ಕಾರಣ ಎಂದು ದೂರು ಬಂದಿದೆ. ಅದರ ಬಗ್ಗೆ ತಾಲ್ಲೂಕು ವೈದ್ಯಾಧಿಕಾರಿಗಳು ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.