ಕೋಲಾರ: ಮಕ್ಕಳ ಮತ್ತು ಮಹಿಳೆಯರ ಅನೈತಿಕ ಸಾಗಣೆ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಸಮಾಜದಲ್ಲಿ ಅರಿವು ಮೂಡಿಸುವುದು ಹೆಚ್ಚಿನ ಅಗತ್ಯವಿದೆ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎ.ಮಂಜುನಾಥ ತಿಳಿಸಿದರು.
ನಗರದ ಕೆಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣೆ ತಡೆ ಕುರಿತು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಅನೇಕ ಅಪರಾಧಗಳನ್ನು ಕಾಣುತ್ತಿದ್ದೇವೆ. ಅಂತಹ ಅಪರಾಧಗಳಲ್ಲಿ ಹೇಯವಾದ್ದದ್ದು ಮಹಿಳೆಯರ ಮತ್ತು ಮಕ್ಕಳ ಸಾಗಣೆ ಆಗಿದೆ ಎಂದರು.
‘ಈಚೆಗೆ 3 ದಿನದ ಮಗುವನ್ನು ಮಾರಾಟ ಮಾಡುವ ಪ್ರಯತ್ನ ನಡೆದಿತ್ತು, ಅದೇ ರೀತಿ ಧರ್ಮಸ್ಥಳದಲ್ಲಿ ನಡೆದಿರುವ ಪ್ರಕರಣಗಳು ಗಮನಿಸುತ್ತಿದ್ದೇವೆ. ಇಂತಹ ಪ್ರಕರಣಗಳು ಗಮನಕ್ಕೆ ಬಂದಾಗ ಬಹಳ ಸಂಕಟವಾಗುತ್ತದೆ. ಈ ತರಹದ ಅನೈತಿಕ ಸಾಗಣೆಯನ್ನು ತಡೆಗಟ್ಟಲು ಸಮಾಜದಲ್ಲಿರುವ ಎಲ್ಲರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಆರ್.ನಟೇಶ್, ವಕೀಲರ ಸಂಘದ ಮುನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಮಕ್ಕಳ ರಕ್ಷಣಾ ಘಟಕ ನಾಗರತ್ನ, ಡಿವೈಎಸ್ಪಿ ಎಂ.ಎಚ್.ನಾಗ್ತೆ, ಜಿಲ್ಲಾ ಅಂಗವಿಕಲ ರಕ್ಷಣಾಧಿಕಾರಿ ಮಂಜುಳಾ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳು, ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದ ಸಂಘ ಸಂಸ್ಥೆಗಳ ಸದಸ್ಯರಿಗೆ ಅಂಗನವಾಡಿಯಲ್ಲಿ ಮಕ್ಕಳಿಗೆ ಬಳಸುವ ಹಾಲನ್ನು ತಂದು ಇಲಾಖೆಯಿಂದ ವಿತರಿಸಲಾಗಿದೆ ಎಂದು ಕೆಲವರು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.