ಕೋಲಾರ: ಜಿಲ್ಲೆಯ 20 ಕೇಂದ್ರಗಳಲ್ಲಿ ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆ-2 ಆರಂಭವಾಗಲಿದ್ದು, 6,683 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ.
ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಕೃಷ್ಣಮೂರ್ತಿ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನೂ ಶುಲ್ಕ ರಹಿತವಾಗಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಲಾಗಿದೆ. ಬಂಗಾರಪೇಟೆ ತಾಲ್ಲೂಕಿನ 4 ಕೇಂದ್ರಗಳಲ್ಲಿ 1,169 ಮಂದಿ, ಕೆಜಿಎಫ್ ತಾಲ್ಲೂಕಿನ 4 ಕೇಂದ್ರಗಳಲ್ಲಿ 1,589 ಮಂದಿ, ಕೋಲಾರ ತಾಲ್ಲೂಕಿನ 5 ಕೇಂದ್ರಗಳಲ್ಲಿ 1,490 ಮಂದಿ ಪರೀಕ್ಷೆ ಬರೆಯಲಿದ್ದಾರೆ.
ಮಾಲೂರು ತಾಲ್ಲೂಕಿನ 2 ಕೇಂದ್ರಗಳಲ್ಲಿ 1,004 ಮಂದಿ, ಮುಳಬಾಗಿಲು ತಾಲ್ಲೂಕಿನ 3 ಕೇಂದ್ರಗಳಲ್ಲಿ 1,071 ಮಂದಿ, ಶ್ರೀನಿವಾಸಪುರ ತಾಲ್ಲೂಕಿನ 2 ಕೇಂದ್ರಗಳಲ್ಲಿ 360 ಮಂದಿ ಪರೀಕ್ಷೆ ಬರೆಯಲಿದ್ದಾರೆ.
ಸುಗಮ ಪರೀಕ್ಷೆಗಾಗಿ ಜಿಲ್ಲೆಯ ಎಲ್ಲಾ 20 ಕೇಂದ್ರಗಳಲ್ಲೂ 20 ಮುಖ್ಯ ಅಧೀಕ್ಷಕರು, 20 ಮಂದಿ ಪ್ರಶ್ನೆಪತ್ರಿಕೆ ಅಭಿರಕ್ಷರು, ಪ್ರತಿ ಕೇಂದ್ರಕ್ಕೆ ತಲಾ ಒಬ್ಬರು ಸ್ಥಾನಿಕ ಜಾಗೃತದಳ ಸಿಬ್ಬಂದಿ, ಕೊಠಡಿ ಮೇಲ್ವಿಚಾರಕರು ಸೇರಿದಂತೆ ಸುಮಾರು 560 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ.ವ್ಯಾಪ್ತಿಯಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಎಂ.ಆರ್.ರವಿ ಜಾರಿ ಮಾಡಿದ್ದಾರೆ. ಪರೀಕ್ಷೆ ವೇಳೆ ಈ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿ ಮುಚ್ಚಲು ಆದೇಶಿಸಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗುವಂತಿಲ್ಲ. ಜೂನ್ 2ರವರೆಗೆ ಪರೀಕ್ಷೆ ನಡೆಯಲಿದೆ.
ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಸಗೀರಾ ಅಂಜುಂ, ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿ ಸೈಯದ ನಾಹಿದ್ ಫಾತಿಮಾ, ಕೋಲಾರ ತಾಲ್ಲೂಕು ಬಿಇಒ ಮಧುಮಾಲತಿ ಪಡುವಣೆ, ವಿವಿಧ ತಾಲ್ಲೂಕುಗಳ ಬಿಇಒಗಳಾದ ಗುರುಮೂರ್ತಿ ರಾಮಚಂದ್ರಪ್ಪ, ಮುನಿಲಕ್ಷ್ಮಯ್ಯ, ಮಂಜುನಾಥ್ ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ, ಸಿಬ್ಬಂದಿ ಗೋವರ್ಧನ್ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ಗಾವಲು ಪರೀಕ್ಷಾ ಕಾರ್ಯಕ್ಕೆ 560 ಮಂದಿ ನೇಮಕ ಡಿಡಿಪಿಐ ಕೃಷ್ಣಮೂರ್ತಿ ಮಾಹಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.