ADVERTISEMENT

ಕೋಲಾರ | ಬ್ಯಾನರ್‌ ಹಿಡಿದು ಸಾಗಿದ ಡಿ.ಸಿ, ಸಿಇಒ!

ನಗರದ ವಿವಿಧ ರಸ್ತೆಗಳಲ್ಲಿ ವಾಕಥಾನ್‌, ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕುರಿತು ಸಾರ್ವಜನಿಕರಲ್ಲಿ ಅರಿವು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 6:00 IST
Last Updated 20 ಸೆಪ್ಟೆಂಬರ್ 2025, 6:00 IST
ಕೋಲಾರದಲ್ಲಿ ಶುಕ್ರವಾರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಸಂಬಂಧ ಅರಿವು ಮೂಡಿಸಲು ನಡೆದ ವಾಕಥಾನ್‌ನಲ್ಲಿ ಜಿಲ್ಲಾಧಿಕಾರಿ ಎಂ.ಆರ್‌.ರವಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್‌ ಪಿ.ಬಾಗೇವಾಡಿ ಬ್ಯಾನರ್‌ ಹಿಡಿದು ನಡೆದರು
ಕೋಲಾರದಲ್ಲಿ ಶುಕ್ರವಾರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಸಂಬಂಧ ಅರಿವು ಮೂಡಿಸಲು ನಡೆದ ವಾಕಥಾನ್‌ನಲ್ಲಿ ಜಿಲ್ಲಾಧಿಕಾರಿ ಎಂ.ಆರ್‌.ರವಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್‌ ಪಿ.ಬಾಗೇವಾಡಿ ಬ್ಯಾನರ್‌ ಹಿಡಿದು ನಡೆದರು   

ಕೋಲಾರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7 ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಈ ಪ್ರಯುಕ್ತ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಶುಕ್ರವಾರ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು.

ವಾಕಥಾನ್‍ಗೆ ಶಾಸಕ ಕೊತ್ತೂರು ಜಿ.ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಎಂ.ಆರ್.ರವಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಹಾಗೂ ‌ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಬ್ಯಾನರ್‌ ಹಿಡಿದು ಸಾಗಿದ್ದು ಗಮನ ಸೆಳೆಯಿತು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಖುದ್ದಾಗಿ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಿದರು.

ಅಧಿಕಾರಿಗಳು, ವಿವಿಧ ಇಲಾಖೆಯ ನೌಕರರು, ಸಿಬ್ಬಂದಿ, ಕಾರ್ಯಕರ್ತರು, ವಿದ್ಯಾರ್ಥಿಗಳು ವಿವಿಧ ರಸ್ತೆಗಳಲ್ಲಿ ಬಿತ್ತಿಪತ್ರ ಹಿಡಿದು ಸಾಗಿದರು. ಕೆಲವೆಡೆ ಮಾನವ ಸರಪಳಿ ರಚಿಸಿದರು. ಸಮೀಕ್ಷೆಯಲ್ಲಿ ಎಲ್ಲರೂ ತಪ್ಪದೆ ಪಾಲ್ಗೊಂಡು ಸರಿಯಾದ ಮಾಹಿತಿ ನೀಡಬೇಕು ಎಂದು ಕೋರಿದರು.

ADVERTISEMENT

ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆ ವೃತ್ತದಿಂದ ಡೂಂಲೈಟ್‌ ಸರ್ಕಲ್‌, ಕ್ಲಾಕ್‌ ಟವರ್‌, ಕೆ‌ಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮೂಲಕ ಮೆಕ್ಕೆ ವೃತ್ತದವರೆಗೆ ವಾಕಥಾನ್ ನಡೆಯಿತು.

ಎಂ.ಆರ್.ರವಿ ಮಾತನಾಡಿ, ‘ಜಿಲ್ಲೆಯಲ್ಲಿ 4.17 ಲಕ್ಷ ಮನೆಗಳಿದ್ದು, ಸಮೀಕ್ಷೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಸ್ಕಾಂ ಸಿಬ್ಬಂದಿ ಪ್ರತಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಜಿಯೋ ಟ್ಯಾಗಿಂಗ್‌ ಮಾಡಿದ್ದಾರೆ‌. ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ನಗರಸಭೆಯ ಅಧಿಕಾರಿಗಳು ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆಗೆ ಸಂಬಂಧಪಟ್ಟ ದಾಖಲೆಗಳು ಹಾಗೂ ಪ್ರಶ್ನೆಯ ನಮೂನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ’ ಎಂದರು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾಕಥಾನ್ ಹಮ್ಮಿಕೊಂಡಿದ್ದು, ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಮೀಕ್ಷೆ ವೇಳೆ ಆಧಾರ್ ಕಾರ್ಡ್ ಮುಖ್ಯವಾಗಿದ್ದು, ನೋಂದಾಯಿಸಿರುವ ಫೋನ್‌ ನಂಬರ್‌ಗೆ ಒಟಿಪಿ ಬರಲಿದೆ. ನಂತರ ಮಾಹಿತಿಯನ್ನು ಕಲೆಹಾಕಲಿದ್ದಾರೆ. ಈ ಸಮೀಕ್ಷೆಯು ಸರ್ವರ್‌ ಮೂಲಕ ನಡೆಯುವ ಸಮೀಕ್ಷೆಯಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ತಹಶೀಲ್ದಾರ್ ಡಾ.ನಯನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೀತಮ್ಮ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ರಮೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ತಾಲ್ಲೂಕು ಇಒ ಮಂಜುನಾಥ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್‌.ಗೀತಾ, ವೆಂಕಟಚಲಪತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

ಸೆ.22ರಂದು ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಾಕಥಾನ್ ಜಿಲ್ಲೆಯಲ್ಲಿ 4.17 ಲಕ್ಷ ಮನೆಗಳು

ಸೆ.22ರಿಂದ ಪ್ರತಿ ಮನೆಗಳಿಗೆ ಸಮೀಕ್ಷೆದಾರರು ತೆರಳಲಿದ್ದು 60 ಪ್ರಶ್ನೆಗಳುಳ್ಳ ನಮೂನೆಯಲ್ಲಿ ವೈಯಕ್ತಿಕ ಮತ್ತು ಕೌಟುಂಬಿಕ ವಿಚಾರಗಳನ್ನು ಕಲೆಹಾಕಲಿದ್ದಾರೆ. ಮಾಹಿತಿ ಕೊಟ್ಟು ಸಹಕರಿಸಿ
ಎಂ.ಆರ್‌.ರವಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.