ADVERTISEMENT

ಕೋಲಾರ ಬಂದ್‌: ಮುತಾಲಿಕ್‌ಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 16:10 IST
Last Updated 17 ನವೆಂಬರ್ 2021, 16:10 IST

ಕೋಲಾರ: ದತ್ತ ಮಾಲಾಧಾರಿಗಳ ಬಸ್‌ ಮೇಲಿನ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಗುರುವಾರ (ನ.18) ಕೋಲಾರ ಬಂದ್‌ಗೆ ಕರೆ ಕೊಟ್ಟಿದ್ದು, ಬಂದ್‌ನ ನೇತೃತ್ವ ವಹಿಸಲು ಬರುತ್ತಿರುವ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

‘ಬಂದ್‌ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುತಾಲಿಕ್ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಬಂದ್‌ ವೇಳೆ ಯಾವುದೇ ರ‍್ಯಾಲಿ ಅಥವಾ ಪ್ರತಿಭಟನಾ ಮೆರವಣಿಗೆ ನಡೆಸುವಂತಿಲ್ಲ’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದಡಿ ಮುತಾಲಿಕ್‌ ಅವರ ವಿರುದ್ಧ ರಾಜ್ಯದ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಜಿಲ್ಲಾ ಕೇಂದ್ರದಲ್ಲಿ ಈ ಹಿಂದೆ ಕೋಮುಗಲಭೆ ನಡೆದ ಉದಾಹರಣೆಗಳಿವೆ. ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಕೋಲಾರ ಜಿಲ್ಲಾ ಕೇಂದ್ರದಲ್ಲಿ 2020ರ ಜನವರಿಯಲ್ಲಿ ನಡೆದ ಜನಾಂದೋಲನದ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದಿತ್ತು. ಹೀಗಾಗಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮುತಾಲಿಕ್‌ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.