ಕೋಲಾರ: ದತ್ತ ಮಾಲಾಧಾರಿಗಳ ಮೇಲಿನ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಕೋಲಾರ ಬಂದ್ಗೆ ಕರೆ ಕೊಟ್ಟಿದ್ದರಿಂದ ಜಿಲ್ಲಾ ಕೇಂದ್ರ ಗುರುವಾರ ಸಂಪೂರ್ಣ ಸ್ತಬ್ಧವಾಯಿತು.
ಜಿಲ್ಲಾ ಕೇಂದ್ರದಲ್ಲಿ ಇಡೀ ದಿನ ವಾಣಿಜ್ಯ ವಹಿವಾಟು ಹಾಗೂ ಬಸ್ ಸೇವೆ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಯಿತು. ಬಂದ್ನ ನೇತೃತ್ವ ವಹಿಸಲು ಜಿಲ್ಲೆಗೆ ಆಗಮಿಸುತ್ತಿದ್ದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿತ್ತು.
ನಿರ್ಬಂಧದ ಆದೇಶ ಲೆಕ್ಕಿಸದೆ ರಸ್ತೆ ಮಾರ್ಗವಾಗಿ ಜಿಲ್ಲೆಯನ್ನು ಪ್ರವೇಶಿಸಲು ಯತ್ನಿಸಿದ ಮುತಾಲಿಕ್ ಹಾಗೂ ಶ್ರೀರಾಮಸೇನೆಯ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವೇಮಗಲ್ ಪೊಲೀಸರು ಜಿಲ್ಲೆಯ ಗಡಿ ಭಾಗದ ರಾಮಸಂದ್ರ ಚೆಕ್ಪೋಸ್ಟ್ನಲ್ಲೇ ತಡೆದು ವಶಕ್ಕೆ ತೆಗೆದುಕೊಂಡರು. ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂದಗುಡಿ ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದರು.
ಬಜರಂಗದಳ, ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್ ಸದಸ್ಯರು ಕ್ಲಾಕ್ಟವರ್ ಮಾರ್ಗವಾಗಿ ಬೈಕ್ ರ್ಯಾಲಿ ನಡೆಸಲು ಉದ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕ್ಲಾಕ್ಟವರ್ ಸುತ್ತಮುತ್ತಲಿನ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ಹಾಗೂ ಜನರ ಓಡಾಟ ನಿರ್ಬಂಧಿಸಲಾಯಿತು. ಹಿಂದೂಪರ ಸಂಘಟನೆಗಳ ಸದಸ್ಯರು ಧಾರಾಕಾರ ಮಳೆ ನಡುವೆಯೂ ನಗರದ ವಿವಿಧೆಡೆ ಬೈಕ್ ರ್ಯಾಲಿ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.