
ಕೋಲಾರ: ರಾಜ್ಯದಲ್ಲಿ 10 ಸಾವಿರಕ್ಕೂ ಅಧಿಕ ಬಾಲಗರ್ಭಿಣಿಯರು ಹಾಗೂ ಜಿಲ್ಲೆಯಲ್ಲಿ ಸುಮಾರು 296 ಬಾಲಗರ್ಭಿಣಿಯರು ಪತ್ತೆಯಾಗಿರುವುದು ಕಳವಳಕಾರಿ ವಿಚಾರವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ನಟೇಶ್ ಕಳವಳ ವ್ಯಕ್ತಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಆಶ್ರಯದಲ್ಲಿ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.
18 ವರ್ಷ ಪೂರ್ಣಗೊಂಡ ಯುವತಿಯರಿಗೆ ಹಾಗೂ 21 ವರ್ಷ ಪೂರ್ಣಗೊಂಡ ಯುವಕರಿಗೆ ಮಾತ್ರ ವಿವಾಹ ಮಾಡಬೇಕು. ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾಡಿದರೆ ಅದು ಕಾನೂನಿನ ಉಲ್ಲಂಘನೆಯಾಗುತ್ತದೆ. ಶಿಕ್ಷೆ ಹಾಗೂ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಂತಹ ಘಟನೆಗಳು ಕಂಡು ಬಂದರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗಮನ ಕ್ಕೆ ತರುವ ಕೆಲಸ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಾಧಿಕಾರದ 15100 ಸಂಖ್ಯೆಗೆ ಸಾರ್ವಜನಿಕರು ಉಚಿತ ದೂರವಾಣಿ ಕರೆ ಮಾಡ ಮಾಹಿತಿ ನೀಡಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಕೆ.ಲಕ್ಷ್ಮಿದೇವಮ್ಮ, ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ಸೀನಪ್ಪ ಎಂ, ಹಿರಿಯ ವಕೀಲೆ ರತ್ನಗೌಡ, ಧರ್ಮಸ್ಥಳ ಸಂಸ್ಥೆ ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ, ಗೋವಿಂದ ನಾಯ್ಕ್, ನಗರಸಭಾ ವಲಯದ ಮೇಲ್ವಿಚಾರಕ ಪವನ್, ಸಮಾಜ ಸೇವಕ ಆಂಜನಪ್ಪ, ಮಹಿಳಾ ಸಮಾಜ ಪಿಯು ಕಾಲೇಜಿನ ಪ್ರಾಂಶುಪಾಲೆ ನವೀನಾ, ಮಹಿಳಾ ಪೊಲೀಸ್ ಠಾಣೆಯ ವೃತ ನಿರೀಕ್ಷಕ ಶಂಕರಚಾರಿ, ಧರ್ಮಸ್ಥಳ ಸಂಸ್ಥೆ ಜಿಲ್ಲಾ ಯೋಜನಾಧಿಕಾರಿ ಸಿದ್ಧಗಂಗಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.