ಕೋಲಾರ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯಿತಿ ಸೇರಿದಂತೆ ಯಾವುದೇ ಭಾಗದಲ್ಲಿ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಇಲ್ಲದಿದ್ದರೆ ಸಿ.ಸಿ.ಟಿ.ವಿ ಕ್ಯಾಮೆರಾ ಮೂಲಕ ಪರಿಶೀಲಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಕಚೇರಿಯ ಆವರಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ನಗರಗಳ ಪ್ರವೇಶ ಮಾಡುತ್ತಿದ್ದಂತೆಯೇ ಕಸದ ರಾಶಿ, ಕಟ್ಟಡಗಳ ತ್ಯಾಜ್ಯ, ಎದ್ದು ಕಾಣುತ್ತಿದೆ. ಅದರ ಬಗ್ಗೆ ಅಧಿಕಾರಿಗಳು ಕ್ರಮಕೈಗೊಂಡು ನಗರಗಳನ್ನು ಸುಂದರವಾಗಿ ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು ಎಂದು ನಿರ್ದೇಶನ ನೀಡಿದರು.
‘ಸಾರ್ವಜನಿಕರು ಸಾಮಾನ್ಯವಾಗಿ ಕಸವನ್ನು ಹಾಕುವ ಸ್ಥಳಗಳಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು. ಸಾರ್ವಜನಿಕರಿಗೆ ಕಸವನ್ನು ಹಾಕುವುದರಿಂದ ಆಗುವಂತಹ ತೊಂದರೆಗಳ ಬಗ್ಗೆ ಅರಿವು ಮೂಡಿಸಿ ಮತ್ತೆ ಅಂತಹ ಸ್ಥಳಗಳಲ್ಲಿ ಕಸವನ್ನು ಹಾಕದಂತೆ ಸೂಚಿಸಬೇಕು. ನಗರದ ನೈರ್ಮಲ್ಯ, ಸ್ವಚ್ಛತೆ ಕಾಪಾಡಬೇಕು’ ಎಂದರು.
ಕಸವನ್ನು ಸಂಗ್ರಹಿಸಲು ತಮ್ಮ ಮನೆಯ ಬಾಗಿಲಿಗೆ ಸರ್ಕಾರದ ವಾಹನವು ಬರಲಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ಕಸದ ವಾಹನಕ್ಕೆ ಹಾಕಬೇಕು. ಇದು ನಮ್ಮೆಲ್ಲರ ಹೊಣೆ ಕೂಡ. ನಗರದ ಆರೋಗ್ಯವನ್ನು ನಾವು ಕಾಪಾಡಬೇಕು’ ಎಂದು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಯೋಜನಾ ಶಾಖಾ ಯೋಜನಾ ನಿರ್ದೇಶಕಿ ಅಂಬಿಕಾ, ಎಇಇ ಶ್ರೀನಿವಾಸ್, ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀನಿವಾಸ್, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.