ಕೋಲಾರ: ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸದ್ಯದಲ್ಲೇ ಟಾಟಾ–ಏರ್ ಬಸ್ ಹೆಲಿಕಾಪ್ಟರ್ ಅಸೆಂಬ್ಲಿ ಲೈನ್ ಘಟಕ ತಲೆ ಎತ್ತಲಿದೆ. ಆರಂಭಿಕವಾಗಿ 500 ಹೆಲಿಕಾಪ್ಟರ್ ತಯಾರಿಸಲು ಬೇಡಿಕೆ ಬಂದಿದೆ.
ಈ ವಿಚಾರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಕರ್ನಾಟಕ ರಾಜ್ಯವು ಆಂಧ್ರ ಪ್ರದೇಶ, ಗುಜರಾತ್, ಉತ್ತರ ಪ್ರದೇಶ ಹಿಂದಿಕ್ಕಿ ಈ ಅವಕಾಶ ಗಿಟ್ಟಿಸಿಕೊಂಡಿದೆ. ಏರೋಸ್ಪೇಸ್ ತಯಾರಿಕಾ ಕ್ಷೇತ್ರದಲ್ಲಿ ಈ ಮೂಲಕ ರಾಜ್ಯದ ಪಾರಮ್ಯ ಮುಂದುವರಿದಿದೆ. ಏರೋಸ್ಪೇಸ್ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಶೇ 65ರಷ್ಟು ಕೊಡುಗೆಯೊಂದಿಗೆ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ವಿಶ್ವದಲ್ಲಿ ಇಂಥ ನಾಲ್ಕು ಅಸೆಂಬ್ಲಿ ಘಟಕಗಳು ಮಾತ್ರ ಇವೆ. ಅದರಲ್ಲಿ ಕರ್ನಾಟಕವೂ ಸ್ಥಾನ ಪಡೆದಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ನಿಲ್ಲಲಿದೆ’ ಎಂದು ಅವರು ಹೇಳಿದ್ದಾರೆ.
‘ಇದರೊಂದಿಗೆ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ತಯಾರಿಕಾ ಕ್ಷೇತ್ರದಲ್ಲಿ ಮತ್ತಷ್ಟು ಸಾಮರ್ಥ್ಯ ಹೆಚ್ಚಿಸಲಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.