ಕೋಲಾರ: ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದ ಎಪಿಎಂಸಿಗೆ ರಜೆ ಘೋಷಿಸಿದ್ದ ಹಿನ್ನೆಲೆಯಲ್ಲಿ ಇಡೀ ಮಾರುಕಟ್ಟೆ ಆವರಣವನ್ನು ಭಾನುವಾರ ಸ್ವಚ್ಛಗೊಳಿಸಿ ಸ್ಯಾನಿಟೈಸ್ ಮಾಡಿಸಲಾಯಿತು.
‘ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಾರಕ್ಕೊಮ್ಮೆ ಮಾರುಕಟ್ಟೆ ಆವರಣ ಸ್ವಚ್ಛಗೊಳಿಸಿ ಸ್ಯಾನಿಟೈಸ್ ಮಾಡಲಾಗುತ್ತಿದೆ’ ಎಂದು ಎಪಿಎಂಸಿ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು.
‘ಭಾನುವಾರ ಮಾರುಕಟ್ಟೆ ಬಂದ್ ಮಾಡುವ ಬಗ್ಗೆ ರೈತರಿಗೆ ಮೊದಲೇ ಮಾಹಿತಿ ನೀಡಲಾಗಿತ್ತು. ಹೀಗಾಗಿ ಯಾರಿಗೂ ತೊಂದರೆಯಾಗಿಲ್ಲ. ಸೋಮವಾರದಿಂದ ಪ್ರತಿನಿತ್ಯ ಮಾರುಕಟ್ಟೆಯಲ್ಲಿ ತರಕಾರಿ ವಹಿವಾಟು ನಡೆಯುತ್ತದೆ’ ಎಂದು ಸ್ಪಷ್ಟಪಡಿಸಿದರು.
‘ಮಾರುಕಟ್ಟೆಗೆ ಬರುವ ಗ್ರಾಹಕರು, ದಲ್ಲಾಳಿಗಳು ಕಡ್ಡಾಯವಾಗಿ ಮುಖಗವಸು ಧರಿಸಬೇಕು ಮತ್ತು ಕೈಗಳಿಗೆ ಸ್ಯಾನಿಟೈಸರ್ ಬಳಸಬೇಕು. ಜತೆಗೆ ವಹಿವಾಟಿನ ಸ್ಥಳದಲ್ಲಿ ಅಂತರ ಕಾಯ್ದುಕೊಳ್ಳಬೇಕು. ಹರಾಜಿನ ಸ್ಥಳದಲ್ಲಿ ಅನಗತ್ಯವಾಗಿ ಗುಂಪುಗೂಡಬಾರದು. ಗ್ರಾಹಕರು ಅಂತರ ಕಾಯ್ದುಕೊಳ್ಳುವಂತೆ ಎಚ್ಚರ ವಹಿಸುವುದು ಮಂಡಿ ಮಾಲೀಕರ ಜವಾಬ್ದಾರಿ’ ಎಂದು ಸೂಚಿಸಿದರು.
‘ಇಡೀ ಮಾರುಕಟ್ಟೆಯಲ್ಲಿ ಕಸದ ರಾಶಿ ತೆರವುಗೊಳಿಸಿ, ಸ್ವಚ್ಛ ಮಾಡಲಾಗಿದೆ. ಮಾರುಕಟ್ಟೆ ಆವರಣದ ಎಲ್ಲಾ ರಸ್ತೆಗಳು, ಹೋಟೆಲ್, ಮಂಡಿ, ಅಂಗಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಕೊರೊನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ರೈತರು, ಮಂಡಿ ಮಾಲೀಕರು ಹಾಗೂ ತರಕಾರಿ ವ್ಯಾಪಾರಿಗಳು ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.
ಎಪಿಎಂಸಿ ಕಾರ್ಯದರ್ಶಿ ಟಿ.ಎಸ್.ರವಿಕುಮಾರ್, ಸಿಬ್ಬಂದಿ ಮುನಿರಾಜು, ವಿಶ್ವನಾಥ್, ಮೂರ್ತಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.