
ಬೀದಿನಾಯಿ
ಕೋಲಾರ: ಬೀದಿನಾಯಿಗಳ ಹಾವಳಿ ತಪ್ಪಿಸಲು ಸಾರ್ವಜನಿಕರಿಗೆ ಅರಿವು ಮೂಡಿಸಿ ಮತ್ತು ದಾಳಿ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬೀದಿನಾಯಿಗಳ ಹಾವಳಿ ನಿಯಂತ್ರಣ ಕ್ರಮಗಳ ಕುರಿತು ಸಭೆಯಲ್ಲಿ ಅವರು ಮಾತನಾಡಿದರು.
ಬೀದಿನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮಗಳನ್ನು ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾಡಬೇಕು ಎಂದು ನಿರ್ದೇಶಿಸಿದರು.
ನಾಯಿ ತಳಿ ಸಂವರ್ಧನೆ ಮತ್ತು ಮಾರಾಟ ಕೇಂದ್ರ ಕಡ್ಡಾಯವಾಗಿ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದರು.
ಪ್ರಾಣಿ ಜನನ ನಿಯಂತ್ರಣ ಕಾಯ್ದೆಯನ್ನು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ, ಈ ಕಾಯ್ದೆಯಡಿ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಕ್ರಿಮಿನಾಶಕ ಮತ್ತು ಲಸಿಕೆ ಕಾರ್ಯಕ್ರಮ ಕಡ್ಡಾಯಗೊಳಿಸುತ್ತವೆ ಎಂದು ತಿಳಿಸಿದರು.
ಕಾಯ್ದೆಯ ಮುಖ್ಯ ಉದ್ದೇಶ ಹೆಚ್ಚುತ್ತಿರುವ ಬೀದಿ ನಾಯಿಗಳ ಜನನ ಪ್ರಮಾಣ ಕಡಿಮೆ ಮಾಡುವುದು, ರೇಬಿಸ್ ಕಾಯಿಲೆ ನಿರ್ಮೂಲನೆ ಮಾಡಲು ನಾಯಿಗಳಿಗೆ ಲಸಿಕೆ ಹಾಕುವುದಾಗಿದೆ ಎಂದರು.
ಪ್ರಸ್ತುತ ಸುಪ್ರೀಂ ಕೋರ್ಟ್ ಆದೇಶದಂತೆ ಬೀದಿ ನಾಯಿಗಳಿಗಾಗಿ ಅಲ್ಲಲ್ಲಿ ಶೆಲ್ಟರ್ ನಿರ್ಮಿಸಿ ಅವುಗಳಲ್ಲಿ ಸಾಕಲು ನಿರ್ದೇಶನ ನೀಡಲಾಗಿದೆ. ಪ್ರತಿ ಘಟಕದಲ್ಲಿ 25 ನಾಯಿಗಳಂತೆ ಉಳಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಎನ್ಜಿಓಗಳು ಜಿಲ್ಲಾಡಳಿತ ಜೊತೆ ಕೈಜೋಡಿಸಬೇಕು ಎಂದು ಹೇಳಿದರು.
ನ್ಯಾಯಾಲಯದ ಆದೇಶದಂತೆ ಶೆಲ್ಟರ್ ನಿರ್ಮಿಸಲು ತಗಲುವ ವೆಚ್ಚ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ, ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಎನ್ಜಿಒಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.