ADVERTISEMENT

‘ಮತ ಕಳ್ಳತನ– ಬಿಜೆಪಿ, ಆಯೋಗ ಶಾಮೀಲು’

ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ, ಸಹಿ ಸಂಗ್ರಹ ಅಭಿಯಾನ–ಮುಖಂಡರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 2:52 IST
Last Updated 28 ಅಕ್ಟೋಬರ್ 2025, 2:52 IST
ಕೋಲಾರದಲ್ಲಿ ಸೋಮವಾರ ಮತಗಳ್ಳತನ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು
ಕೋಲಾರದಲ್ಲಿ ಸೋಮವಾರ ಮತಗಳ್ಳತನ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು   

ಕೋಲಾರ: ದೇಶದ ವಿವಿಧೆಡೆಯ ಚುನಾವಣೆಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ನಗರದ ಹೊಸ ಬಸ್ ನಿಲ್ದಾಣ ಬಳಿ ಪ್ರತಿಭಟನೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣಾ ಆಯೋಗವು ಬಿಜೆಪಿ ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ‘ಒಂದೇ ಮನೆಯಲ್ಲಿ ಸುಮಾರು 10 ಸಾವಿರ ಜನರಿದ್ದಾರೆ ಎಂದು ವಿಳಾಸ ತೋರಿಸುತ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ. ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸುತ್ತಿದೆಯೇ? ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ. ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೆ, ಮತಗಳ್ಳತನ ಆಗಿಲ್ಲ– ಕ್ಷಮಾಪಣೆ ಕೇಳಬೇಕು ಎನ್ನುತ್ತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಕುರಿತು ಹಳ್ಳಿ ಹಳ್ಳಿಗೂ ಹೋಗಿ ಮಾಹಿತಿ ನೀಡಬೇಕು ಎಂದರು.

ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ, ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿವೆ. ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ, ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ‘ಒಂದು ಮತಕ್ಕೆ ₹ 80 ಕೊಟ್ಟು 6 ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು. ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ. ಸಿಬಿಐ, ಇ.ಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ. ಜೊತೆಗೆ ಸುಪ್ರೀಂ ಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು’ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.