
ಕೋಲಾರದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಅಧಿಕಾರಿಗಳ ಸಭೆ ನಡೆಸಿದರು
ಕೋಲಾರ: ಎಸ್ಎಸ್ಎಲ್ಸಿ ಮೊದಲನೇ ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ತಾಲ್ಲೂಕುವಾರು ಮಧ್ಯವಾರ್ಷಿಕ ಪರೀಕ್ಷೆಯ (ಎಸ್ಎ-1) ಫಲಿತಾಂಶ ಹೋಲಿಕೆ ಮಾಡಬೇಕು. ಕಡಿಮೆ ಫಲಿತಾಂಶ ಪಡೆದ ತಾಲ್ಲೂಕುಗಳಲ್ಲಿ ಸುಧಾರಣೆಗೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಸಂಬಂಧ ಬುಧವಾರ ನಡೆದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಿ. ಈಗಾಗಲೇ ಕಲಿಕಾ ಪ್ರಗತಿ ಹೊಂದಿರುವ ಹಾಗೂ ಕಲಿಕಾ ಸುಧಾರಣೆ ಆಗಬೇಕಾದ ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ ಉತ್ತಮ ಸಾಧನೆಗೆ ಸೂಕ್ತ ಕಲಿಕಾ ಚಟುವಟಿಕೆ ನಡೆಸಬೇಕು. ಪರೀಕ್ಷೆ-1ರಲ್ಲಿ ಎಲ್ಲಾ ವಿಷಯಗಳಲ್ಲಿ 50 ರಿಂದ 100, 100 ರಿಂದ 200 ಅಂಕ ಪಡೆದಿರುವ ವಿದ್ಯಾರ್ಥಿಗಳ ಗುಂಪು ರಚಿಸಿ ಅವರಿಗೆ ಪ್ರತ್ಯೇಕ ಕ್ರಿಯಾಯೋಜನೆ ರೂಪಿಸಿ ತೇರ್ಗಡೆಯಾಗಲು ಕ್ರಮ ಕೈಗೊಳ್ಳಬೇಕು ಎಂದರು.
ಫಲಿತಾಂಶವನ್ನು ಉತ್ತಮ ಪಡಿಸುವ ಸಂಬಂಧ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಕಡ್ಡಾಯವಾಗಿ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಭೇಟಿ ನೀಡಬೇಕು. ವಿದ್ಯಾರ್ಥಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿ ವರದಿ ನೀಡಬೇಕು. ಪೂರ್ವಸಿದ್ಧತಾ ಪರೀಕ್ಷೆ-1ರಲ್ಲಿ ಕಡಿಮೆ ಫಲಿತಾಂಶ ಪಡೆದಿರುವ ಶಾಲಾ ಮುಖ್ಯ ಶಿಕ್ಷರಿಗೆ ಉತ್ತಮ ಫಲಿತಾಂಶಕ್ಕೆ ತಾಕೀತು ಮಾಡಬೇಕು. ಮುಂಬರುವ 2 ಮತ್ತು 3ನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಲು ಸೂಕ್ಷ್ಮ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ವಾರ ಪ್ರತಿ ಶಾಲೆಯ ಮಕ್ಕಳಿಗೆ ಗ್ರಂಥಾಲಯದಲ್ಲಿ ಪುಸ್ತಗಳೊಂದಿಗೆ ಕಲಿಯುವ ಹವ್ಯಾಸ ಬೆಳೆಸಲು ಕ್ರಮ ವಹಿಸಬೇಕು. ಪ್ರತಿ ವಿಷಯ ಶಿಕ್ಷಕರು ಪ್ರತಿಯೊಂದು ಮಗುವಿನ ಶೈಕ್ಷಣಿಕ ಬೆಳವಣಿಗೆ ಬಗ್ಗೆ ಖಾಸಗಿಯಾಗಿ ಗಮನ ಹರಿಸಬೇಕು. ಪಠ್ಯೇತರ ಚಟುವಟಿಕೆಗಳಲ್ಲಿಯೂ ಮಕ್ಕಳು ಭಾಗವಹಿಸುವಂತೆ ನೋಡಿಕೊಳ್ಳಬೇಕು. ಓದಿನಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಮುಖ್ಯವಾಹಿನಿಗೆ ತರಬೇಕು. ಶಾಲೆಗಳಲ್ಲಿ ಹಿಂದಿನ ಬೆಂಚಿನ ವಿದ್ಯಾರ್ಥಿಗಳು ಎಂಬ ಪರಿಕಲ್ಪನೆ ತೊಲಗಿಸಲು U ಅಥವಾ ಓ ಆಕಾರವಾಗಿ ಆಸನ ವ್ಯವಸ್ಥೆ ಮಾಡಿಸಬೇಕು. ಸಾಧ್ಯವಿಲ್ಲದಿದ್ದರೆ ಆವರ್ತನ ಪದ್ಧತಿಯಲ್ಲಿ ಮಕ್ಕಳಿಗೆ ಸ್ಥಾನ ಕಲ್ಪಿಸಬೇಕು ಎಂದರು.
ಶಾಲೆಯ ಕಲಿಕೆ ಕೇವಲ ಉರು ಹೊಡೆಯುವ ಪ್ರಕ್ರಿಯೆಯಲ್ಲದೆ ವೈಜ್ಞಾನಿಕ ರೀತಿಯಲ್ಲಿ ಇರಬೇಕು ಎಂದು ತಿಳಿಸಿದರು.
ಇಲಾಖೆಯ ಇತರೆ ಶೈಕ್ಷಣಿಕ ಕಾರ್ಯಕ್ರಮಗಳು, ಶಾಲಾ ಕಟ್ಟಡ ಕಾಮಗಾರಿಗಳು, ಮಧ್ಯಾಹ್ನದ ಉಪಾಹಾರ ಯೋಜನೆ ಹಾಗೂ ಸಾಕ್ಷರತಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮೈಲಾರಪ್ಪ, ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಇದ್ದರು.
ಪೂರ್ವ ಸಿದ್ಧತಾ ಪರೀಕ್ಷೆ; 590 ವಿದ್ಯಾರ್ಥಿಗಳು ಗೈರು
ಮೊದಲನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಜಿಲ್ಲೆಯಾದ್ಯಂತ ಸುಮಾರು 590 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಗೈರು ವಿದ್ಯಾರ್ಥಿಗಳ ಮನೆಗಳಿಗೆ ಸಂಬಂಧಪಟ್ಟ ಪಿಡಿಒ ಭೇಟಿ ನೀಡಿ ಮರಳಿ ಶಾಲೆಗೆ ಕರೆತರುವ ಜವಾಬ್ದಾರಿ ವಹಿಸಿಕೊಳ್ಳಬೇಕು. ‘ಸಿ’ ಗ್ರೇಡ್ ಪಡೆದಿರುವ ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಗಮನ ನೀಡಿ ಕನಿಷ್ಠ ಕಲಿಕೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಬೋಧನೆ ಮಾಡಬೇಕು ಎಂದು ಡಾ.ಪ್ರವೀಣ್ ಪಿ.ಬಾಗೇವಾಡಿ ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.