ADVERTISEMENT

ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಒತ್ತಾಯ

ದುಡಿಯುವ ವರ್ಗದ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿ ಸಿಐಟಿಯು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 7:04 IST
Last Updated 23 ನವೆಂಬರ್ 2025, 7:04 IST
ಕೋಲಾರದಲ್ಲಿ ಶನಿವಾರ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮುಖಂಡರು, ಸದಸ್ಯರು ಪ್ರತಿಭಟನೆ ನಡೆಸಿದರು
ಕೋಲಾರದಲ್ಲಿ ಶನಿವಾರ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮುಖಂಡರು, ಸದಸ್ಯರು ಪ್ರತಿಭಟನೆ ನಡೆಸಿದರು   

ಕೋಲಾರ: ಕಾರ್ಮಿಕರಿಗೆ ಸಂಬಂಧಿಸಿದ 29 ಕಾನೂನುಗಳನ್ನು, ನಾಲ್ಕು ಸಂಹಿತೆಗಳನ್ನಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಈ ಮೂಲಕ ದುಡಿಯುವ ವರ್ಗವನ್ನು ಬೀದಿಗೆ ತಂದು ನಿಲ್ಲಿಸುವ ಹುನ್ನಾರ ಅಡಗಿದೆ. ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರದ್ದುಗೊಳಿಸಿ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ನಗರದ ಮೆಕ್ಕೆ ವೃತ್ತದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ‘ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂದ ನಂತರದಲ್ಲಿ ಪ್ರತಿ ಕ್ಷೇತ್ರದಲ್ಲಿಯೂ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡಲಾಗುತ್ತಿದೆ. ಈಚೆಗೆ ನಡೆದ ಬಿಹಾರ ರಾಜ್ಯದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಅಧಿಕಾರಕ್ಕೆ ಬಂದ ತಕ್ಷಣವೇ ಕಾರ್ಮಿಕರ ಸಂಹಿತೆಗಳು ಜಾರಿ ಮಾಡಿ ಕಾರ್ಮಿಕರನ್ನು ಬೀದಿಯಲ್ಲಿ ನಿಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ’ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ, ‘ದೇಶದಲ್ಲಿ ಶೇ 70ರಷ್ಟು ದುಡಿಯುವ ವರ್ಗದ ಕಾರ್ಮಿಕರು ಈ ಸಂಹಿತೆಗಳ ವ್ಯಾಪ್ತಿಗೆ ಒಳಪಡುವುದೇ ಇಲ್ಲ. ಕಾರ್ಮಿಕ ಸಂಘಗಳ ಮುಷ್ಕರದ ಹಕ್ಕುಗಳನ್ನು ಹಂತ ಹಂತವಾಗಿ ನಿರ್ಬಂಧಿಸಲಾಗುತ್ತಿದೆ. ಸಂಘಟಿತರಾಗಿ ಕಾರ್ಯಕ್ರಮಗಳನ್ನು ನಡೆಸಿದರೆ ಅದೂ ಅಪರಾಧ ಆಗುತ್ತದೆ. ಬಂಡವಾಳಶಾಹಿಗಳ ಹಿತಕ್ಕಾಗಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ’ ಎಂದು ದೂರಿದರು.

ADVERTISEMENT

ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ ಮಾತನಾಡಿ, ‘ನರೇಂದ್ರ ಮೋದಿ ದೇಶವನ್ನು ಹಿಂದುತ್ವದ ಆಧಾರದಲ್ಲಿ ಕಟ್ಟಬೇಕು ಎನ್ನುತ್ತಾರೆ. ಇಲ್ಲಿ ಕೆಲಸ ಮಾಡುವ ಬಹುತೇಕರು ಹಿಂದೂಗಳೇ ಆಗಿದ್ದಾರೆ. ಆದರೆ. ಹಿಂದೂ ಎನ್ನುವ ಪದವನ್ನು ಬಂಡವಾಳಶಾಹಿಗಳ ಹಿತ ಕಾಯಲು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಕಾರ್ಮಿಕರನ್ನು ಜೀತದಾಳು ಮಾಡಲು ಹೊರಟಿದೆ. ಈ ಸಂಹಿತೆಗಳು ಅನುಷ್ಠಾನವಾದರೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಇರುವುದಿಲ್ಲ. 8 ಗಂಟೆಗಳ ಬದಲಾಗಿ 12 ಗಂಟೆ ಕೆಲಸ ಮಾಡಬೇಕಾಗುತ್ತದೆ. ಹೀಗೆ, ಕಾರ್ಮಿಕ ವಿರೋಧಿ ಸಂಹಿತೆಗಳನ್ನು ರದ್ದುಗೊಳಿಸುವಂತೆ ನಡೆಸುತ್ತಿರುವ ಹೋರಾಟವನ್ನು ಅಪರಾಧದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದಾರೆ’ ಎಂದು ಕಿಡಿಕಾರಿದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ‘ದೇಶದಲ್ಲಿರುವ ಅಸಂಘಟಿತ, ಅನೌಪಚಾರಿಕ ಕಾರ್ಮಿಕರನ್ನು ಕಾರ್ಮಿಕ ಕಾನೂನಿನ ಅಡಿ ತರಬೇಕು ಎನ್ನುವ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ತಿರಸ್ಕರಿಸಿದೆ. ಇದರಿಂದ ಕಾರ್ಮಿಕರು ನಾನಾ ಸೌಲಭ್ಯ ವಂಚಿತರಾಗುತ್ತಾರೆ. ಮುಷ್ಕರ ಮಾಡುವವರಿಗೆ, ಬೆಂಬಲ ಸೂಚಿಸುವವರಿಗೆ ಜೈಲು, ದಂಡ, ಕೆಲಸದಿಂದ ತೆಗೆಯುವ ಕಾನೂನುಗಳನ್ನು ರೂಪಿಸಲಾಗುತ್ತಿದೆ. ಇದರಿಂದ ಇನ್ನು ಮುಂದೆ ಮುಷ್ಕರ ಮಾಡುವಂತಿಲ್ಲ. ಸಂಘಗಳನ್ನು ಕಟ್ಟುವಂತಿಲ್ಲ. ಇಂತಹ ಮಾರಕವಾದ ಅಂಶಗಳನ್ನು ಈ ಕಾಯಿದೆಯಲ್ಲಿ ಅಡಕಗೊಳಿಸಲಾಗಿದೆ’ ಎಂದರು.

ಕೆಪಿಆರ್‌ಎಸ್‌ ಜಿಲ್ಲಾ ಅಧ್ಯಕ್ಷ ಟಿ.ಎಂ.ವೆಂಕಟೇಶ್ , ತಾಲ್ಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶ್, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಸಿಐಟಿಯು ಜಿಲ್ಲಾ ಪದಾಧಿಕಾರಿಗಳಾದ ಎಂ.ಭೀಮರಾಜ್, ಬಿ.ಎಲ್.ಕೇಶವರಾವ್, ಕೆ.ವಿ.ಮಂಜುನಾಥ್ ಎನ್.ಕಲ್ಪನಾ, ಮಂಜುಳಾ, ವೆಂಕಟಲಕ್ಷ್ಮಿ, ಲಕ್ಷ್ಮಿದೇವಿ, ಲೋಕೇಶ್ವರಿ, ಮೋಹನ್, ಅಪ್ಪಯ್ಯಣ್ಣ, ಆರೋಗ್ಯನಾಥನ್, ಶಿವರಾಜ್, ಅಂಜಿನಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.