ADVERTISEMENT

ಉಳಿದ ಅವಧಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಿ: ಮುಖ್ಯಮಂತ್ರಿಗೆ ಶಾಸಕ ನಂಜೇಗೌಡ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:55 IST
Last Updated 14 ಡಿಸೆಂಬರ್ 2025, 6:55 IST
<div class="paragraphs"><p>ಸಿದ್ದರಾಮಯ್ಯ&nbsp;</p></div>

ಸಿದ್ದರಾಮಯ್ಯ 

   

ಕೋಲಾರ: ರಾಜ್ಯ ಕಾಂಗ್ರೆಸ್‌ ಸರ್ಕಾರದ ಇನ್ನುಳಿದ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡುವಂತೆ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಆಗ್ರಹಿಸಿದ್ದಾರೆ.

ತಾಲ್ಲೂಕಿನ ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನೇ ಈ ವಿಚಾರ ಪ್ರಸ್ತಾಪಿಸಿದೆ. ಅದು ಹೇಗೆ ಹೊರಗಡೆ ಬಂತು ಎಂಬುದು ನನಗೆ ಗೊತ್ತಿಲ್ಲ. ಆದರೆ, ಹೆಚ್ಚಿನ ಶಾಸಕರು ಮುಂದಿನ ಎರಡೂವರೆ ವರ್ಷಗಳಲ್ಲಿ ರಸ್ತೆ ಸೇರಿದಂತೆ ಅಭಿವೃದ್ಧಿ ವಿಚಾರಗಳಿಗೆ ಆದ್ಯತೆ ನೀಡಬೇಕೆಂಬ ನನ್ನ ಮಾತಿಗೆ ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದರು’ ಎಂದರು.

ADVERTISEMENT

ಎರಡೂವರೆ ವರ್ಷಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಬಡವರಿಗೆ ತಲುಪಿಸಿರುವುದಕ್ಕೆ ನಾವು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದೇವೆ. ಯಾವುದೇ ಕಾರಣಕ್ಕೂ ನಾನು ಟೀಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಗುರಿ 2028ರಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ಉದ್ದೇಶದಿಂದ ಮತ್ತಷ್ಟು ಅಭಿವೃದ್ಧಿ ಅಗತ್ಯವಿದೆ ಎಂದು ತಿಳಿಸಿದರು.

ಕೋಮುಲ್‌ ವಿಚಾರದಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮೃದು ಧೋರಣೆ ತಾಳಿರುವುದಕ್ಕೆ ಪ್ರತಿಕ್ರಿಯಿಸಿ, ‘ನಾನು ಹಾಗೂ ನಾರಾಯಣಸ್ವಾಮಿ ಸ್ನೇಹಿತರು. ನನ್ನನ್ನು ಸದಾ ಅಣ್ಣ ಎಂದೇ ಕರೆಯುತ್ತಾರೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರುತ್ತದೆ. ಹಾಲು ಒಕ್ಕೂಟದ ವಿಚಾರದಲ್ಲಿ ಅವರಿಗೆ ಕೆಲವೊಂದು ಗೊಂದಲ ಇದ್ದು, ಆ ಬಗ್ಗೆ ಮಾತನಾಡಿದ್ದಾರೆ’ ಎಂದರು.

ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಎಂಬುದನ್ನು ಈ ಮೊದಲೇ ಹೇಳಿದ್ದೇನೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಬೈರತಿ ಸುರೇಶ್‌, ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇ‌ಶ್ ಎಲ್ಲರೂ ನನ್ನ ಪರ ಇದ್ದಾರೆ. ನನ್ನನ್ನೇ ಆ ಸ್ಥಾನಕ್ಕೆ ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷದ ಹೆಜ್ಜೆ ಗುರುತು ಇಲ್ಲದ ಸಂದರ್ಭದಲ್ಲಿ ನಾನು ಮಾಲೂರಿನಲ್ಲಿ ಪಕ್ಷ ಕಟ್ಟಿದ್ದೇನೆ. ಪಕ್ಷದ ಗೌರವ ಉಳಿಸಿದ್ದೇನೆ. ಸ್ಥಳೀಯ ಸಂಘ ಸಂಸ್ಥೆ, ಡಿಸಿಸಿ ಬ್ಯಾಂಕ್‌, ಕೋಮುಲ್‌ ಚುನಾವಣೆ, ಪಿಎಲ್‌ಡಿ ಬ್ಯಾಂಕ್‌ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಬೆಂಬಲಿತರಿಗೆ ಯಶಸ್ಸು ಸಿಗುತ್ತಿದೆ ಎಂದು ನುಡಿದರು.

ಒಂದೂವರೆ ತಿಂಗಳಲ್ಲಿ ಮುಖ್ಯಮಂತ್ರಿ ಮಾಲೂರಿಗೆ ಬಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.