ಕೋಲಾರ: ‘ತಾಲ್ಲೂಕಿನ ಗರುಡನಪಾಳ್ಯ ಸಮೀಪ ಸರ್ಕಾರಿ ಜಮೀನು, ಕೆರೆ ಜಮೀನನ್ನು ಕಂದಾಯ ಸಚಿವ ಕೃಷ್ಣಬೈರೇಗೌಡರ ಕುಟುಂಬಸ್ಥರು ಒತ್ತುವರಿ ಮಾಡಿಕೊಂಡಿದ್ದು, ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದೇವೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತರಾದ ಚಂಜಿಮಲೆ ಡಿ.ಮುನೇಶ್ ಹಾಗೂ ನವೀನ್ ಕುಮಾರ್ ಆಗ್ರಹಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕೃಷ್ಣಬೈರೇಗೌಡರು ಪ್ರಭಾವಿ ಸಚಿವರಾಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುವುದಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪವಾಗಬೇಕು ಎಂಬ ನಿಟ್ಟಿನಲ್ಲಿ ದೂರು ನೀಡಲಾಗಿದೆ’ ಎಂದರು.
‘ಸರ್ವೆ ಸಂಖ್ಯೆ 10 ಹಾಗೂ 48ರಲ್ಲಿ ಕೆರೆ, ರಾಜಕಾಲುವೆ, ಕೆರೆ ಅಂಗಳ ಸುತ್ತಲೂ ಮಣ್ಣು ಮುಚ್ಚಿ ಒತ್ತುವರಿ ಮಾಡಿಕೊಳ್ಳಲಾಗಿದೆ. ಜೊತೆಗೆ ಜಲಮೂಲಗಳ ಸ್ವರೂಪವನ್ನೇ ಹಾನಿಗೊಳಿಸಿದ್ದಾರೆ’ ಎಂದು ಆರೋಪಿಸಿದರು.
‘ಕೃಷ್ಣಬೇರೇಗೌಡರು ಪ್ರತಿ ತಿಂಗಳು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ವೇಳೆಯಲ್ಲಿ ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಾರೆ. ಮೊದಲು ಸರ್ಕಾರಿ ಜಾಗವನ್ನು ಬಿಟ್ಟುಕೊಟ್ಟು ಮಾದರಿಯಾಗಲಿ’ ಎಂದು ಒತ್ತಾಯಿಸಿದರು.
‘ಸರ್ಕಾರಿ ಜಮೀನು ಒತ್ತುವರಿ ತೆರವು ಗೊಳಿಸುವ ವಿಚಾರದಲ್ಲಿ ಬಡವರಿಗೊಂದು ನ್ಯಾಯ, ಉಳ್ಳವರಿಗೆ ಒಂದು ನ್ಯಾಯ ತೋರಬಾರದು. ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಭೂ ಅಕ್ರಮಗಳು ನಡೆಯಲು ದಾರಿ ಮಾಡಿಕೊಟ್ಟಂತಾಗುತ್ತದೆ’ ಎಂದರು.
‘ಮಾಲೂರು ತಾಲ್ಲೂಕು ವ್ಯಾಪ್ತಿಯಲ್ಲೂ ಈ ಹಿಂದೆ ಸರ್ಕಾರಿ ಜಮೀನನ್ನು ಅನರ್ಹರಿಗೆ ಮಂಜೂರು ಮಾಡಿರುವುದು ಸಾಬೀತಾಗಿದ್ದು, 19 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡುವಂತೆ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದು, ತಹಶೀಲ್ದಾರ್ ರೂಪಾ ನಿರ್ಲಕ್ಷ್ಯ ತೋರುತ್ತಿದ್ದಾರೆ. ಅವರ ತಲೆದಂಡ ಆಗಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.