
ಕೆಜಿಎಫ್ ನ್ಯಾಯಾಲಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯಲ್ಲಿ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಶಿವಕುಮಾರ್ ಮಾತನಾಡಿದರು. ನ್ಯಾಯಾಧೀಶರು, ಇತರರು ಇದ್ದರು.
ಕೆಜಿಎಫ್: ನ್ಯಾಯಾಂಗದಲ್ಲಿ ತ್ವರಿತ ಮತ್ತು ಕಡಿಮೆ ವೆಚ್ಚದಲ್ಲಿ ವ್ಯಾಜ್ಯ ಬಗೆಹರಿಸುವ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಶಿವಕುಮಾರ್ ತಿಳಿಸಿದರು.
ರಾಬರ್ಟಸನ್ಪೇಟೆಯ ನ್ಯಾಯಾಲಯದ ಸಂಕೀರ್ಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಧಿಕಾರವು ಲೋಕ ಅದಾಲತ್ ಕಾರ್ಯಕ್ರಮವನ್ನು
ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ದೇಶದ ಮೂಲೆ ಮೂಲೆಗಳಲ್ಲಿ ನಡೆಯುವ ಅದಾಲತ್ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥವಾಗದೆ ಇರುವುದು ವಿಷಾಧನೀಯ ಎಂದರು.
ಕೆಜಿಎಫ್ ನ್ಯಾಯಾಲಯ ಸಂಕೀರ್ಣದಲ್ಲಿ 10231 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ವಿಚಾರಣೆ ನಡೆಸಲಾಗಿದೆ. 8,291 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದೇವೆ. ಶೇ 80 ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಿರುವುದರಿಂದ ಕಕ್ಷಿದಾರರಿಗೆ ನ್ಯಾಯ ಸಿಕ್ಕಿದೆ. ಈ ನಿಟ್ಟಿನಲ್ಲಿ ವಕೀಲರು ಸೇರಿದಂತೆ ಹಲವು ಇಲಾಖೆಗಳ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಯೋಜನೆಗಳು ಫಲಾನುಭವಿಗಳಿಗೆ ಸಿಗುವ ಬಗ್ಗೆ ಕೂಡ ನ್ಯಾಯಾಲಯ ವೀಕ್ಷಣೆ ಮಾಡುತ್ತಿದೆ. ಸರ್ಕಾರದ ಯೋಜನೆಗಳ ತಿಳುವಳಿಕೆ ಫಲಾನುಭವಿಗಳಿಗೆ ಸಿಗುತ್ತಿಲ್ಲ. ಈ ದಿಕ್ಕಿನಲ್ಲಿ ಕೂಡ ನ್ಯಾಯಾಲಯದ ಜೊತೆಗೆ ಎಲ್ಲರೂ ಸಹಕರಿಸಬೇಕು ಎಂದರು.
ನ್ಯಾಯಾಲಯದಿಂದ ಸಿಗುವ ಕಾನೂನು ಸೇವೆಗಳ ಬಗ್ಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಎನ್.ಬಿ.ಜಯಲಕ್ಷ್ಮಿ ಮಾಹಿತಿ ನೀಡಿದರು.
ನ್ಯಾಯಾಧೀಶರಾದ ಎಂ.ವಿನೋದ್ ಕುಮಾರ್, ಕೆ.ಶಮಿದ, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ, ವಕೀಲರ ಸಂಘದ ಕಾರ್ಯದರ್ಶಿ ಕೆ.ಸಿ.ನಾಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.