ADVERTISEMENT

ಸ್ವಚ್ಛತೆ ಮಹತ್ವ ಶಿಕ್ಷಣದ ಭಾಗವಾಗಲಿ: ಯಂಗ್ ಇಂಡಿಯಾ ಡೆವಲಪ್‌ಮೆಂಟ್‌ ಸೊಸೈಟಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 16:01 IST
Last Updated 4 ಆಗಸ್ಟ್ 2021, 16:01 IST
ಕೋಲಾರ ತಾಲ್ಲೂಕಿನ ಅರಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಸ್ವಚ್ಛ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಕ್ಕಳು ಸ್ವಚ್ಛತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು
ಕೋಲಾರ ತಾಲ್ಲೂಕಿನ ಅರಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಸ್ವಚ್ಛ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಕ್ಕಳು ಸ್ವಚ್ಛತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು   

ಕೋಲಾರ: ‘ಗ್ರಾಮೀಣ ನೈರ್ಮಲ್ಯ ಮತ್ತು ಸ್ವಚ್ಛತೆ ಬಗ್ಗೆ ಮಕ್ಕಳಿಗೆ ಬಾಲ್ಯಾವಸ್ಥೆಯಿಂದಲೇ ಅರಿವು ಮೂಡಿಸಬೇಕು. ಸ್ವಚ್ಛತೆಯ ಮಹತ್ವವನ್ನು ಶಿಕ್ಷಣದ ಭಾಗವಾಗಿಸುವುದು ಅತ್ಯಗತ್ಯ’ ಎಂದು ಯಂಗ್ ಇಂಡಿಯಾ ಡೆವಲಪ್‌ಮೆಂಟ್‌ ಸೊಸೈಟಿ ಅಧ್ಯಕ್ಷ ನಾಗರಾಜ್ ಅಭಿಪ್ರಾಯಪಟ್ಟರು.

ಜಿಲ್ಲಾ ನೆಹರೂ ಯುವ ಕೇಂದ್ರ ಮತ್ತು ಯಂಗ್ ಇಂಡಿಯಾ ಡೆವಲಪ್‌ಮೆಂಟ್‌ ಸೊಸೈಟಿ ಸಹಯೋಗದಲ್ಲಿ ತಾಲ್ಲೂಕಿನ ಅರಹಳ್ಳಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸ್ವಚ್ಛ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಗ್ರಾಮೀಣ ಭಾಗದ ಜನರಿಗೆ ಸ್ವಚ್ಛತೆ ಹಾಗೂ ಶೌಚಾಲಯ ಬಳಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದರು.

‘ಗ್ರಾಮೀಣ ಭಾಗದಲ್ಲಿ ಜನರು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಜನರು ಶೌಚಾಲಯದ ಮಹತ್ವ ಅರಿಯದಿರುವುದು ವಿಷಾದನೀಯ. ಗ್ರಾಮೀಣ ಭಾಗದಲ್ಲಿ ಇಂದಿಗೂ ಬಯಲು ಬಹಿರ್ದೆಸೆ ಇದ್ದು, ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ’ ಎಂದು ಹೇಳಿದರು.

ADVERTISEMENT

‘ಆರೋಗ್ಯಕರ ಜೀವನ ಸಾಗಿಸಲು ಸಣ್ಣ ಅಗತ್ಯತೆಗೂ ಹೆಚ್ಚಿನ ಮಹತ್ವ ನೀಡುವ ಜನರು ವೈಯಕ್ತಿಕ ಸ್ವಚ್ಛತೆ ಬಗ್ಗೆ ಕಾಳಜಿ ತೋರಬೇಕು. ಊಟದ ನಂತರ ಚೆನ್ನಾಗಿ ಕೈ ತೊಳೆಯುವ ಜನರು ಊಟಕ್ಕೂ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯುವುದಿಲ್ಲ. ಸಾರ್ವಜನಿಕ ಸ್ಥಳಗಳು, ಖಾಲಿ ನಿವೇಶನಗಳು ಹಾಗೂ ರಸ್ತೆ ಬದಿಯಲ್ಲಿ ಕಸ ಎಸೆಯುವ ಜನರಿಗೆ ಸ್ವಚ್ಛತೆ ಬಗ್ಗೆ ಕಾಳಜಿಯಿಲ್ಲ’ ಎಂದು ವಿಷಾದಿಸಿದರು.

ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಮಕ್ಕಳು ಸ್ವಚ್ಛತೆಯ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಯುವ ಜಾಗೃತಿ ದಳದ ಅಧ್ಯಕ್ಷೆ ತಾರಾ, ಸದಸ್ಯರಾದ ಭಾನು, ಮಂಜುಳಾ, ಅಮರಾವತಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.