
ಮಾಲೂರು: ನಗರಸಭೆ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚಿಸಿದರು.
ನಗರೋತ್ಥಾನ ಯೋಜನೆಯಡಿ ಅನುಷ್ಠಾನಗೊಂಡಿರುವ ರಸ್ತೆ ಅಭಿವೃದ್ಧಿ ಡಾಂಬರಿಕರಣ ಕಾಮಗಾರಿ ಶನಿವಾರ ವೀಕ್ಷಿಸಿ ಮಾತನಾಡಿದರು.
ಸರ್ಕಾರವು ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಯೋಜನೆಗಳ ಅನುದಾನದ ಮೂಲಕ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಕೊಳ್ಳುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ವೀಕ್ಷಿಸುವ ಮೂಲಕ ಸರ್ಕಾರದ ಅನುದಾನ ಪೋಲಾಗದಂತೆ ಗುಣಮಟ್ಟದ ಕಾಮಗಾರಿಗಳನ್ನು ಗುತ್ತಿಗೆದಾರರಿಂದ ಪಡೆಯಬೇಕು ಎಂದರು.
ಜಿಲ್ಲೆಯಾದ್ಯಂತ ಸ್ವಚ್ಛತೆ ಹಿತದೃಷ್ಟಿಯಿಂದ ಸ್ವಚ್ಛತಾ ಆಂದೋಲನ ಅನುಷ್ಠಾನಗೊಳಿಸಲಾಗಿದೆ. ಸ್ವಚ್ಛತೆಗಾಗಿ ಹಲವು ರೀತಿಯ ಕಾರ್ಯಕ್ರಮ ರೂಪಿಸಲಾಗಿದೆ. ನಾಗರಿಕರು ಕಸವನ್ನು ಎಲ್ಲೆಂದರಲ್ಲಿ ಹಾಕದೆ ಪರಿಸರ ಕಲುಷಿತ ಮಾಡದೆ ಮನೆಗಳಲ್ಲಿ ಸಂಗ್ರಹವಾಗುವ ಕಸವನ್ನು ಹಸಿ ಕಸ ಹಾಗೂ ಒಣಕಸವನ್ನಾಗಿ ವಿಂಗಡಿಸಬೇಕು ಎಂದರು.
ಸ್ವಚ್ಛತಾ ಕಾರ್ಯಪಡೆ ವಾಹನ ನಗರದಲ್ಲಿ ಗಸ್ತು ತಿರುಗುವುದರ ಮೂಲಕ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ವಾಣಿಜ್ಯವಾಗಿ ಉತ್ಪತ್ತಿಯಾಗುವ ಕಸ ಸಂಗ್ರಹಿಸಲು ಎನ್ಜಿಒ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಕಸ ಸಂಗ್ರಹ ಮಾಡಲು ಕಸ ನಿರ್ವಹಣೆ ಘಟಕ ಪ್ರಾರಂಭಿಸಲಾಗಿದೆ. ಪಟ್ಟಣ, ನಗರ ಸ್ವಚ್ಛ ಹಾಗೂ ಕಸಮುಕ್ತವನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳೊಂದಿಗೆ ಕೈಜೋಡಿಸುವಂತೆ ಹೇಳಿದರು.
ಕಾರ್ಯಪಾಲಕ ಶ್ರೀನಿವಾಸ್, ಹೋರಾಡಳಿತ ಇಲಾಖೆಯ ಕೋಶ ಶಾಖೆ ಸಿಬ್ಬಂದಿ ಅಜಿತ್, ನಗರ ಸಭೆ ಎಂಜನಿಯರ್ ನಾಗರಾಜ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸ್, ಸಿಎಒ ಮಂಜುನಾಥ್ ಇನ್ನಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.